
- ಕಾನೂನು ತೊಡಕು ನಿವಾರಿಸಲು ಪಿಟಿಸಿಎಲ್ ಕಾಯ್ದೆಗೆ ತಿದ್ದುಪಡಿ ತರಲು ಸಮ್ಮತಿ
- ಆರು ಅಭಿವೃದ್ಧಿ ನಿಗಮಗಳಿಗೆ 2023-24ರಲ್ಲಿ ಒಟ್ಟು ₹1,842 ಕೋಟಿ ಅನುದಾನ
2023-24ನೇ ಸಾಲಿನ ಬಜೆಟ್ನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಏಳಿಗೆಗೆ ಪರಿಶಿಷ್ಟ ಜಾತಿ ಉಪಯೋಜನೆ ಹಾಗೂ ಪರಿಶಿಷ್ಟ ಪಂಗಡ ಉಪಯೋಜನೆಯಡಿ ಒಟ್ಟು ₹30,215 ಕೋಟಿ ಒದಗಿಸಲಾಗುವುದು. ಇದರಲ್ಲಿ ಪರಿಶಿಷ್ಟ ಜಾತಿ ಉಪ ಯೋಜನೆಗೆ ₹21,343 ಕೋಟಿ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆಯಡಿ ₹8,872 ಕೋಟಿ ರೂ. ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದರು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಈ ಬಾರಿಯ ಬಜೆಟ್ನಲ್ಲಿ ಘೋಷಿಸಿದ ಯೋಜನೆಗಳು ಕೆಳಗಿನಂತಿವೆ
- ಕರ್ನಾಟಕ ಪರಿಶಿಷ್ಟ ಜಾತಿ ಉಪ ಯೋಜನೆ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆ ಕಾಯ್ದೆ 2013ರ ಅನುಷ್ಠಾನದ 10 ವರ್ಷಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಕಲ್ಯಾಣಕ್ಕಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಕಾಯ್ದೆಯನ್ನು ಇನ್ನಷ್ಟು ಸುಧಾರಿಸಲು ಸೆಕ್ಷನ್ 7(ಡಿ) ಪರಿಷ್ಕರಣೆ ಸೇರಿದಂತೆ ಹಲವಾರು ಸಲಹೆಗಳು ಬಂದಿವೆ. ಈ ಸಲಹೆಗಳನ್ನು ಗಂಭೀರವಾಗಿ ಪರಿಗಣಿಸಿ, ಅವುಗಳನ್ನು ಜಾರಿಗೊಳಿಸಲು ಕ್ರಮ.
- ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಜಮೀನನ್ನು ಸಂರಕ್ಷಿಸಲು ಈಗಿರುವ ಕಾನೂನು ತೊಡಕುಗಳನ್ನು ನಿವಾರಿಸಲು 'ಪಿಟಿಸಿಎಲ್' ಕಾಯ್ದೆಗೆ ಸೂಕ್ತ ತಿದ್ದುಪಡಿ ತರಲು ಸಮ್ಮತಿ.
- ಅಮೃತ ಜ್ಯೋತಿ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಬಿಪಿಎಲ್ ಪಡಿತರ ಕಾರ್ಡ್ ಹೊಂದಿರುವ ಕುಟುಂಬಗಳಿಗೆ ಮಾಸಿಕ 75 ಯೂನಿಟ್ ಉಚಿತ ವಿದ್ಯುತ್ ಸೌಲಭ್ಯ.
- ಗಂಗಾಕಲ್ಯಾಣ ಯೋಜನೆಯಡಿ ನಾನಾ ನಿಗಮಗಳ ಮೂಲಕ 17,000 ಫಲಾನುಭವಿಗಳಿಗೆ ₹675 ಕೋಟಿ ಸಹಾಯಧನವನ್ನು ನೇರ ಪಾವತಿ ಮೂಲಕ ಅನುಷ್ಠಾನಗೊಳಿಸುವ ಗುರಿ.
- ಸಮಾಜ ಕಲ್ಯಾಣ, ಪರಿಶಿಷ್ಟ ಪಂಗಡಗಳ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳಿಂದ ಸರ್ಕಾರಿ ಉದ್ಯೋಗಕ್ಕೆ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ 9,500 ಅಭ್ಯರ್ಥಿಗಳಿಗೆ ತರಬೇತಿ.
- ಗ್ರಾಮೀಣ ಪ್ರದೇಶದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ವಸತಿ ಯೋಜನೆಗಳಲ್ಲಿ ಘಟಕ ಸಹಾಯಧನ ₹1.75 ಲಕ್ಷ ಗಳಿಂದ ₹2 ಲಕ್ಷಕ್ಕೆ ಹೆಚ್ಚಳ.
- ಭೂ ಒಡೆತನ ಯೋಜನೆಯಡಿ ಘಟಕ ವೆಚ್ಚದ ಮೊತ್ತವನ್ನು ₹15 ಲಕ್ಷ ಗಳಿಂದ ₹20 ಲಕ್ಷ ರೂ. ಗಳಿಗೆ ಹಾಗೂ ಬೆಂಗಳೂರು ನಗರ, ಗ್ರಾಮಾಂತರ, ಚಿಕ್ಕಬಳ್ಳಾಪುರ, ರಾಮನಗರ ಜಿಲ್ಲೆಗಳಲ್ಲಿ ₹25 ಲಕ್ಷಗಳಿಗೆ ಹೆಚ್ಚಳ.
- ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಯುವಕರು ಸ್ವಯಂ ಉದ್ಯೋಗ ಕೈಗೊಳ್ಳಲು ವಿದ್ಯುತ್ ಚಾಲಿತ ತ್ರಿಚಕ್ರ ಸರಕು ವಾಹನ ಖರೀದಿಗೆ ₹50 ಸಾವಿರ ಧನ ಸಹಾಯ ನೀಡುವ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಈ ಯೋಜನೆಯನ್ನು ಮುಂದುವರೆಸಿ ಬಾಬು ಜಗಜೀವನ್ರಾಮ್ ಸ್ವಯಂ ಉದ್ಯೋಗ ಯೋಜನೆ ಯಡಿಯಲ್ಲಿ ಎಲೆಕ್ಟ್ರಿಕ್ ತ್ರಿಚಕ್ರ ಅಥವಾ ನಾಲ್ಕು ಚಕ್ರದ ಸರಕು ವಾಹನಗಳನ್ನು ಖರೀದಿಸಲು ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 100 ಫಲಾನುಭವಿಗಳಿಗೆ ಶೇ. 50 ರಷ್ಟು ₹2 ಲಕ್ಷದವರೆಗೂ ಸಹಾಯಧನ ನೀಡಲಾಗುವುದು. ಇದಕ್ಕಾಗಿ ₹400 ಕೋಟಿ ವೆಚ್ಚವಾಗಲಿದೆ.
- ರಾಜ್ಯದಲ್ಲಿ ಗಂಗಾ ಕಲ್ಯಾಣ ಯೋಜನೆಯ ಅನುಷ್ಠಾನವು ಬೇರೆ ಬೇರೆ ಕಾರಣಗಳಿಂದ ವಿಳಂಬವಾಗುತ್ತಿದ್ದು, ಇದನ್ನು ಬಗೆಹರಿಸಿ ‘ಇ-ರೂಪೀ’ ಮೂಲಕ ನೇರವಾಗಿ ಫಲಾನುಭವಿಗಳಿಗೆ ಹಣ ಪಾವತಿಸಲು ಕ್ರಮ.
- ಮೆಟ್ರಿಕ್ ನಂತರದಲ್ಲಿ ಶಾಲೆಯಿಂದ ಹೊರಗುಳಿಯುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳ ಸಂಖ್ಯೆಯನ್ನು ತಗ್ಗಿಸಲು 100 ಕ್ರೈಸ್ ವಸತಿ ಶಾಲೆಗಳನ್ನು ಉನ್ನತೀಕರಿಸಿ ಪದವಿ ಪೂರ್ವ ಶಿಕ್ಷಣ ಪ್ರಾರಂಭ.
- ಪ್ರಸ್ತುತ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಗುತ್ತಿಗೆದಾರರಿಗೆ ₹50 ಲಕ್ಷಗಳವರೆಗಿನ ಸಣ್ಣ ಕಾಮಗಾರಿಗಳಲ್ಲಿ ಶೇ. 24ರವರೆಗೆ ಮೀಸಲಾತಿ ನಿಗದಿಪಡಿಸಿದ್ದು, ಈ ಮೊತ್ತವನ್ನು ₹1 ಕೋಟಿವರೆಗೆ ಹೆಚ್ಚಳ.
- ವಸತಿ ಶಾಲೆಗಳಲ್ಲಿನ ಕ್ರೀಡಾ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುವ ದೃಷ್ಟಿಯಿಂದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳಿಗೆ ಸೇರಿದ ಒಟ್ಟು 10 ಕ್ರೈಸ್ ವಸತಿ ಶಾಲೆಗಳಲ್ಲಿ, ಒಂದು ಶಾಲೆಗೆ ಒಂದರಂತೆ, ಉತ್ಕೃಷ್ಟ ಮಟ್ಟದ ಕ್ರೀಡಾ ಸೌಲಭ್ಯಕ್ಕೆ ₹10 ಕೋಟಿ.
- ಪರಿಶಿಷ್ಟ ಪಂಗಡದ ಮಕ್ಕಳಿಗೆ ವಿದ್ಯಾರ್ಥಿ ನಿಲಯಗಳು ಇಲ್ಲದೇ ಇರುವ ಜಿಲ್ಲಾ ಕೇಂದ್ರಗಳಲ್ಲಿ ₹6 ಕೋಟಿ ವೆಚ್ಚದಲ್ಲಿ 14 ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರಾರಂಭ.
- ರಾಷ್ಟ್ರೀಯ ಶಿಕ್ಷಣ ಸಂಸ್ಥೆಗಳಾದ ಐಐಟಿ, ಐಐಎಂ, ಐಐಎಸ್ಸಿ, ಎನ್ಐಟಿ ಮುಂತಾದ ಸಂಸ್ಥೆಗಳಲ್ಲಿ ಪ್ರವೇಶ ಪಡೆಯುವ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ₹2 ಲಕ್ಷ ಪ್ರೋತ್ಸಾಹಧನ ನೀಡುತ್ತಿದ್ದು, ಈ ಪ್ರೋತ್ಸಾಹಧನದ ಮೊತ್ತ ₹4 ಲಕ್ಷಕ್ಕೆ ಹೆಚ್ಚಳ.
ಈ ಸುದ್ದಿ ಓದಿದ್ದೀರಾ? ರಾಜ್ಯ ಬಜೆಟ್-2023 | ಬಿಜೆಪಿ ಸರ್ಕಾರದ ಕೊನೆಯ ಬಜೆಟ್ ಮಂಡಿಸಿದ ಸಿಎಂ; 3,09,182 ಕೋಟಿ ರೂ.ಗಳ ಬೃಹತ್ ಆಯವ್ಯಯ
- ಐಎಸ್ಇಸಿ ಸಂಸ್ಥೆಯಲ್ಲಿ ಪಿಎಚ್ಡಿ ಮಾಡುವ 5 ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ವಿದ್ಯಾರ್ಥಿಗಳಿಗೆ ಡಾ. ಬಿ ಆರ್ ಅಂಬೇಡ್ಕರ್ ಫೆಲೋಶಿಪ್ ನೀಡಲು ₹2 ಕೋಟಿ ಪ್ರೋತ್ಸಾಹಧನ ಸ್ಥಾಪನೆ.
- ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನಿರುದ್ಯೋಗಿಗಳಿಗೆ ನಾನಾ ಆದಾಯ ಬರುವ ಚಟುವಟಿಕೆಗಳನ್ನು ಕೈಗೆತ್ತಿಕೊಳ್ಳಲು ವಾಣಿಜ್ಯ ಬ್ಯಾಂಕ್ಗಳಿಂದ ಪಡೆಯುವ ಗರಿಷ್ಠ ₹10 ಲಕ್ಷವರೆಗಿನ ಸಾಲವನ್ನು ಶೇ. 4ರಷ್ಟು ಬಡ್ಡಿ ದರದಲ್ಲಿ ದೊರಕಿಸಲು ಸರ್ಕಾರದ ವತಿಯಿಂದ ಬಡ್ಡಿ ಸಹಾಯಧನ.
- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತ ವರ್ಗಗಳಿಗೆ ಸೇರಿದ 10,000 ಯುವ ಜನರು ಭಾರತೀಯ ಸೇನೆಯಲ್ಲಿ 'ಅಗ್ನಿವೀರ'ರಾಗಿ ನೇಮಕಾತಿ ಹೊಂದಲು ಉಚಿತ ತರಬೇತಿ.
- ಸಫಾಯಿ ಕರ್ಮಚಾರಿಗಳಿಗೆ ರಾಜೀವ್ ಗಾಂಧಿ ವಸತಿ ನಿಗಮದ ವತಿಯಿಂದ ವಸತಿ ಸೌಲಭ್ಯ.
- ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಸೇರಿದ ವಿವಿಧ ಆರು ಅಭಿವೃದ್ಧಿ ನಿಗಮಗಳಿಗೆ ನೀಡುತ್ತಿರುವ ಅನುದಾನವನ್ನು ಕಳೆದ ವರ್ಷಕ್ಕಿಂತ ಗಣನೀಯವಾಗಿ ಹೆಚ್ಚಿಸಿ, ಪ್ರಸಕ್ತ ಸಾಲಿನಲ್ಲಿ ₹795 ಕೋಟಿ. ನಿಗಮಗಳಿಗೆ ನೀಡಿರುವ ಹೆಚ್ಚುವರಿ ಅನುದಾನ ಮತ್ತು ಈಗಾಗಲೇ ಲಭ್ಯವಿರುವ ಮೊತ್ತವೂ ಸೇರಿದಂತೆ 2023-24ರಲ್ಲಿ ಒಟ್ಟು ₹1,842 ಕೋಟಿ ವೆಚ್ಚದಲ್ಲಿ ವಿವಿಧ ಯೋಜನೆಗಳ ಅನುಷ್ಠಾನ.
- ದೇವನಹಳ್ಳಿಯಲ್ಲಿ ಸ್ಥಾಪಿಸಲಾಗಿರುವ ಡಾ. ಬಿ ಆರ್ ಅಂಬೇಡ್ಕರ್ ಕೌಶಲ ಅಭಿವೃದ್ಧಿ ಕೇಂದ್ರದ ವಿಸ್ತರಣೆಗೆ ₹2 ಕೋಟಿ ಅನುದಾನ.