ಪ್ರತಿಭಟನೆ ವೇಳೆ ರಸ್ತೆ ತಡೆ ನಡೆಸಿ ಸಾರ್ವಜನಿಕರಿಗೆ ತೊಂದರೆ ನೀಡಿದ ಕಾರಣವೊಡ್ಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕರ್ನಾಟಕ ಹೈಕೋರ್ಟ್ 10 ಸಾವಿರ ರೂಪಾಯಿ ದಂಡ ವಿಧಿಸಿದೆ.
ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆಗೆ ಮಾಜಿ ಸಚಿವ, ಬಿಜೆಪಿ ನಾಯಕ ಕೆಎಸ್ ಈಶ್ವರಪ್ಪ ಕಾರಣ ಎಂದು ಆರೋಪಿಸಿ ಕಾಂಗ್ರೆಸ್ ನಾಯಕರು 2022ರ ಏಪ್ರಿಲ್ನಲ್ಲಿ ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದರು. ಪ್ರತಿಭಟನೆಯಲ್ಲಿ ನೂರಾರು ಮಂದಿ ಕಾಂಗ್ರೆಸ್ ಕಾರ್ಯಕರ್ತರು ಭಾಗಿಯಾಗಿದ್ದರು. ಈ ವೇಳೆ ರಸ್ತೆ ತಡೆ ಉಂಟಾಗಿ ಕಿಲೋಮೀಟರ್ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿತ್ತು. ಇದರಿಂದ ಜನಸಾಮಾನ್ಯರ ಸಂಚಾರಕ್ಕೆ ತೊಂದರೆಯುಂಟಾಗಿತ್ತು.
ಹೀಗಾಗಿ ಪ್ರತಿಭಟನೆ ವೇಳೆ ರಸ್ತೆ ತಡೆ ನಡೆಸಿ ಸಾರ್ವಜನಿಕರಿಗೆ ತೊಂದರೆ ನೀಡಿದ್ದಾರೆ ಎಂದು ಆರೋಪಿಸಿ ಆಗಿನ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಪ್ರಕರಣ ದಾಖಲಾಗಿತ್ತು. ಇದೀಗ ಈ ಪ್ರಕರಣದ ರದ್ದು ಕೋರಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಇದನ್ನು ಓದಿದ್ದೀರಾ? ಉತ್ತರಾಖಂಡ | ವಿಧಾನಸಭೆಯಲ್ಲಿ ಏಕರೂಪ ನಾಗರಿಕ ಸಂಹಿತೆ ಮಸೂದೆ ಮಂಡಿಸಿದ ಸಿಎಂ ಪುಷ್ಕರ್ ಸಿಂಗ್ ಧಾಮಿ
ಅರ್ಜಿಯ ವಿಚಾರಣೆ ನಡೆಸಿ ನ್ಯಾ. ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ಹೈಕೋರ್ಟ್ ಪೀಠ, ಮಾರ್ಚ್ 6 ರಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚನೆ ನೀಡಿದೆ. ಅಲ್ಲದೇ, ಮಾರ್ಚ್ 7ರಂದು ಸಚಿವ ರಾಮಲಿಂಗಾರೆಡ್ಡಿ, ಮಾರ್ಚ್ 11ರಂದು ರಣದೀಪ್ ಸಿಂಗ್ ಸುರ್ಜೇವಾಲಾ, ಮಾರ್ಚ್ 15 ರಂದು ಎಂ.ಬಿ.ಪಾಟೀಲ್ ಅವರನ್ನು ಹಾಜರಾಗುವಂತೆ ನಿರ್ದೇಶನ ನೀಡಿದೆ.