- ಜೂ.20ರಂದು ಎಲ್ಲ ಜಿಲ್ಲಾ ಕೇಂದ್ರಗಳಲ್ಲೂ ಕೇಂದ್ರ ಬಿಜೆಪಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ
- ‘ಬಿಜೆಪಿ ಸೋತರೆ ಕೇಂದ್ರದ ಯೋಜನೆ ಬಂದ್ ಆಗಲಿವೆ ಎಂದಿದ್ದ ನಡ್ಡಾ ಮಾತು ನಿಜವಾಗಿದೆ’
ಇಡೀ ಕರ್ನಾಟಕ ಜನತೆಗೆ ಕಾಂಗ್ರೆಸ್ ಪಕ್ಷ ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದೆ. ಅದರಲ್ಲಿ ‘ಅನ್ನಭಾಗ್ಯ’ ಕೂಡ ಒಂದು. ಆದರೆ ಕೇಂದ್ರ ಸರ್ಕಾರ ಅನ್ನಭಾಗ್ಯ ಯೋಜನೆಗೆ ಅಕ್ಕಿ ಕೊಡದಂತೆ ದ್ವೇಷ ರಾಜಕಾರಣಕ್ಕೆ ಮುಂದಾಗಿದೆ. ಈ ಬಗ್ಗೆ ಜನರಿಗೂ ಗೊತ್ತಾಗಬೇಕು. ಹೀಗಾಗಿ ಕೇಂದ್ರ ಸರ್ಕಾರದ ಧೋರಣೆ ಖಂಡಿಸಿ ಬರುವ ಮಂಗಳವಾರ (ಜೂ.20) ಎಲ್ಲ ಜಿಲ್ಲಾ ಕೇಂದ್ರಗಳಲ್ಲೂ ಕಾಂಗ್ರೆಸ್ ಪ್ರತಿಭಟನೆ ನಡೆಸಲಿದೆ ಎಂದು ಉಪಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಿಳಿಸಿದರು.
ಶುಕ್ರವಾರ ಕೆಪಿಸಿಸಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, “ಒಕ್ಕೂಟ ವ್ಯವಸ್ಥೆಯಲ್ಲಿ ಬಿಜೆಪಿಯ ರಾಷ್ಟ್ರಾಧ್ಯಕ್ಷರಾದ ಜೆಪಿ ನಡ್ಡಾ ಅವರು ಚುನಾವಣೆಗೂ ಮುನ್ನ ರಾಜ್ಯದಲ್ಲಿ ಬಿಜೆಪಿ ಸೋತರೆ ಕೇಂದ್ರದ ಯೋಜನೆಗಳು ಬಂದ್ ಆಗಲಿವೆ ಎಂದಿದ್ದರು. ಈಗ ಅವರು ನುಡಿದಂತೆ ನಡೆದಿದ್ದಾರೆ. ಈ ಮೂಲಕ ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಸಹಕಾರ ಕೊಡಲ್ಲ ಎಂಬುದನ್ನು ಅವರೇ ತೋರಿಸಿಕೊಟ್ಟಿದ್ದಾರೆ” ಎಂದು ವ್ಯಂಗ್ಯವಾಗಿ ಕುಟುಕಿದರು.
“ನಮ್ಮನ್ನು ಹೆದರಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಕಾಂಗ್ರೆಸ್ ಪಕ್ಷಕ್ಕೆ ಮತಹಾಕಿದವರಿಗೆ ಅಕ್ಕಿ ಸಿಗಬಾರದು ಎಂಬುದು ಬಿಜೆಪಿ ಉದ್ದೇಶ. ಬಡವರು ಹಸಿವಿನಿಂದ ಮಲಗಬಾರದು ಎಂದು ಅನ್ನಭಾಗ್ಯ ಯೋಜನೆ ಜಾರಿ ಮಾಡಿದ್ದೇವೆ. ಈ ಮೂಲಕ ತಲಾ 10 ಕೆಜಿ ಅಕ್ಕಿ ಕೊಡುವುದಾಗಿ ಘೋಷಿಸಿದ್ದೇವೆ. ಆದರೆ ಈ ಕೇಂದ್ರ ಬಿಜೆಪಿ ಸರ್ಕಾರ ಬಡವರ ಹೊಟ್ಟೆ ಮೇಲೆ ಹೊಡೆಯಲು ಮುಂದಾಗಿದೆ” ಎಂದು ಟೀಕಿಸಿದರು.
“ನಾವೇನು ಕೇಂದ್ರ ಸರ್ಕಾರಕ್ಕೆ ಉಚಿತವಾಗಿ ಅಕ್ಕಿ ಕೊಡಿ ಎಂದು ಕೇಳಿಲ್ಲ. ಭಾರತೀಯ ಆಹಾರ ಮಂಡಳಿಗೆ ಪತ್ರ ಬರೆದು, 2,88,425 ಮೆಟ್ರಿಕ್ ಟನ್ ಅಕ್ಕಿ ಕೊಡಲು ಮನವಿ ಮಾಡಿಕೊಂಡಿದ್ದೆವು. ಅವರು ಕೂಡ ಜೂ.12ರಂದು ಪ್ರತಿಕ್ರಿಯಿಸಿ, “ನಮ್ಮಲ್ಲಿ 7 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಸ್ಟಾಕ್ ಇದೆ. ನಿಮ್ಮ ಮನವಿ ಅನುಸಾರ ಅಕ್ಕಿ ಕೊಡುತ್ತೇವೆ” ಎಂದು ಉತ್ತರಿಸಿದ್ದರು. ಆದರೆ ಮರುದಿನವೇ ಮತ್ತೊಂದು ಪತ್ರ ಬರೆದು ನಮ್ಮಲ್ಲಿ ಅಕ್ಕಿ ಸ್ಟಾಕ್ ಇಲ್ಲ ಎಂದರು. ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಮತದಾರರನ್ನು ಕಂಡರೆ ಆಗಲ್ಲ ಎಂಬುದಕ್ಕೆ ಇದು ಮತ್ತೊಂದು ನಿದರ್ಶನ” ಎಂದರು.
ಈ ಸುದ್ದಿ ಓದಿದ್ದೀರಾ? ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧದ ಐದು ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್
10 ಕೆಜಿ ಅಕ್ಕಿ ಕೊಟ್ಟೇ ಕೊಡುತ್ತೇವೆ
ಕಾಂಗ್ರೆಸ್ ನುಡಿದಂತೆ ನಡೆಯುವ ಪಕ್ಷ. ಎಷ್ಟೇ ಹೊರೆಯಾಗಲಿ 10 ಕೆಜಿ ಅಕ್ಕಿ ಕೊಟ್ಟೇ ಕೊಡುತ್ತೇವೆ. ಈ ಬಗ್ಗೆ ಬೇರೆ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ನಮ್ಮ ಮುಖ್ಯಮಂತ್ರಿಗಳು ಮಾತನಾಡಿದ್ದಾರೆ. ಸಾದ್ಯವಾದರೆ ನಮ್ಮ ಮುಖ್ಯಮಂತ್ರಿಗಳು ಮತ್ತು ಆಹಾರ ಇಲಾಖೆ ಮಂತ್ರಿಗಳು ಬೇರೆ ರಾಜ್ಯಗಳ ಮುಖ್ಯಮಂತ್ರಿಗಳನ್ನು ಖುದ್ದು ಭೇಟಿ ಮಾಡಿ ಅಕ್ಕಿ ತರುವ ವ್ಯವಸ್ಥೆ ಮಾಡಲಿದ್ದಾರೆ. ಅಲ್ಲಿವರೆಗೂ ಸ್ವಲ್ಪ ತಡವಾಗಬಹುದು” ಎಂದು ಹೇಳಿದರು.
ಗೃಹ ಲಕ್ಷ್ಮಿ ಯೋಜನೆ
ಗೃಹ ಲಕ್ಷ್ಮಿ ಯೋಜನೆ ವಿಳಂಬ ಕುರಿತು ಪತ್ರಕರ್ತರು ಪ್ರಶ್ನಿಸಿದಾಗ, “ಗೃಹ ಲಕ್ಷ್ಮಿ ಯೋಜನೆಯ ಅರ್ಜಿಗಳನ್ನು ವಿತರಿಸಲು ನಾವು ಸಿದ್ಧತೆ ಮಾಡಿಕೊಂಡಿದ್ದೆವು. ಆದರೆ ಆನ್ಲೈನ್ ಸೇವಾ ಕೇಂದ್ರಗಳಲ್ಲಿ ದಿನಕ್ಕೆ 200 ಫಲಾನುಭವಿಗಳಿಗೆ ಮಾತ್ರ ಅರ್ಜಿ ಸಲ್ಲಿಸಲು ಸಾಧ್ಯವಾಗುತ್ತದೆ. ಇದರಿಂದ ಮಹಿಳೆಯರು ಸರಥಿ ಸಾಲಲ್ಲಿ ನಿಲ್ಲಬೇಕು. ಜನರಿಗೆ ಸಮಸ್ಯೆಯಾಗಬಾರದು ಎಂದು ನಾವೇ ವಿಳಂಬ ಮಾಡಿದ್ದೇವೆ. ಪರಿಹಾರಕ್ಕಾಗಿ ಮೊಬೈಲ್ ಆಪ್ ಸಿದ್ಧಪಡಿಸಲಾಗುತ್ತಿದೆ. ಮನೆಯಲ್ಲೇ ಕುಳಿತು ಅರ್ಜಿ ಸಲ್ಲಿಸುವ ಸೌಲಭ್ಯ ಕಲ್ಪಿಸುತ್ತೇವೆ” ಎಂದು ತಿಳಿಸದರು.