ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಸೋಮವಾರದಿಂದ ಮೂರು ದಿನಗಳ ಕಾಲ ಮೊದಲ ಅಧಿವೇಶನ ನಡೆಯಲಿದೆ. ಈ ಹಿನ್ನೆಲೆ ವಿಧಾನಸೌಧದ ಆವರಣವನ್ನು ಕಾಂಗ್ರೆಸ್ ಕಾರ್ಯಕರ್ತರು ಗೋ ಮೂತ್ರ ಸಿಂಪಡಿಸಿ ಸ್ವಚ್ಛಗೊಳಿಸಿದ್ದಾರೆ ಎಂದು ತಿಳಿದುಬಂದಿದೆ.
ಈ ಕುರಿತು ಇಮ್ರಾನ್ ಖಾನ್ ಎಂಬುವರು ವಿಡಿಯೋ ಸಹಿತ ಟ್ವೀಟ್ ಮಾಡಿದ್ದು, “40 ಪರ್ಸೆಂಟ್ ಕಮಿಷನ್ ಸರ್ಕಾರ ಎಂದು ಹೇಳುತ್ತಿದ್ದ ಕರ್ನಾಟಕ ಕಾಂಗ್ರೆಸ್ ಕಾರ್ಯಕರ್ತರು, ವಿಧಾನಸೌಧದ ದ್ವಾರದಲ್ಲಿ ಗೋ ಮೂತ್ರ ಎರಚಿ ಪೂಜೆ ಸಲ್ಲಿಸಿದರು” ಎಂದು ಬರೆದುಕೊಂಡಿದ್ದಾರೆ.
ಇಮ್ರಾನ್ ಖಾನ್ ಎಂಬುವರ ಟ್ವೀಟ್ಗೆ ಹಲವರು ಪ್ರತಿಕ್ರಿಯಿಸಿದ್ದು, ಕಾಂಗ್ರೆಸ್ನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. “ಬಿಜೆಪಿಯನ್ನು ಕೋಮುವಾದಿ ಸರ್ಕಾರ ಎನ್ನುತ್ತಿದ್ದ ಕಾಂಗ್ರೆಸ್, ಅಹಿಂದಾ ಬೆಂಬಲದಿಂದ ಅಧಿಕಾರಕ್ಕೆ ಬಂದಿದೆ. ಈಗ ಈ ರೀತಿ ಗೋ ಮೂತ್ರದ ಮೊರೆ ಹೋಗಿದೆ” ಎಂದು ವ್ಯಾಪಕ ಟೀಕೆ ವ್ಯಕ್ತವಾಗಿದೆ. ವ್ಯಕ್ತಿಯೊಬ್ಬರು ‘congRSS’ ಎಂದು ಕಮೆಂಟ್ ಮಾಡಿ ಕಿಡಿಕಾರಿದ್ದಾರೆ.
ವಿಧಾನಸೌಧ ಯಾವಾಗಲೂ ಸ್ವಚ್ಛವಾಗಿಯೇ ಇರುತ್ತದೆ. ಈ ರೀತಿ ಮಾಡುವ ಅಗತ್ಯವಿಲ್ಲ. ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಯಾವುದೇ ವ್ಯತ್ಯಾಸವಿಲ್ಲ ಎಂದು ನೆಟ್ಟಿಗರು ವ್ಯಂಗ್ಯವಾಡಿದ್ದಾರೆ. ಅಲ್ಲದೆ ಇದು ಡಿ.ಕೆ ಶಿವಕುಮಾರ್ ಅವರ ಸೂಚನೆಯಂತೆ ನಡೆದಿದೆಯೇ? ಎಂದು ಪ್ರಶ್ನಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಬಿಜೆಪಿ ಸರ್ಕಾರದ ಮೇಲಿನ 40% ಕಮಿಷನ್ ಆರೋಪ, ಪಿಎಸ್ಐ ಪ್ರಕರಣ ತನಿಖೆ ಮಾಡಲಿ: ಸಿಎಂ ಬೊಮ್ಮಾಯಿ ಆಗ್ರಹ