ದಕ್ಷಿಣ ಕನ್ನಡ ಜಿಲ್ಲಾಡಳಿತವು ವಿವಿಧ ಜಲ ಸಂಪನ್ಮೂಲಗಳನ್ನು ನಿರ್ವಹಿಸಲು ಮತ್ತು ಬೇಸಿಗೆಯಲ್ಲಿ ಕುಡಿಯುವ ನೀರಿನ ಬಿಕ್ಕಟ್ಟನ್ನು ತಡೆಗಟ್ಟಲು ಸಹಾಯಕ ಆಯುಕ್ತರ (ಎಸಿ) ನೇತೃತ್ವದಲ್ಲಿ ಸಮಿತಿಯನ್ನು ರಚಿಸಿದೆ.
ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಸುದ್ದಿಗಾರರೊಂದಿಗೆ ಮಾತನಾಡಿ, “ಜಿಲ್ಲೆಯ ಚೆಕ್ ಡ್ಯಾಮ್ಗಳು ಮತ್ತು ಇತರ ಜಲಸಂಪನ್ಮೂಲಗಳಲ್ಲಿ ಲಭ್ಯವಿರುವ ನೀರನ್ನು ನ್ಯಾಯಯುತವಾಗಿ ಬಳಸುವುದನ್ನು ಖಚಿತಪಡಿಸಿಕೊಳ್ಳಲು ಯೋಜನೆಗಳನ್ನು ಕೈಗೊಳ್ಳಲಾಗುವುದು” ಎಂದರು.
“ತುಂಬೆ ವೆಂಟೆಡ್ ಅಣೆಕಟ್ಟು, ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಮೂಲಗಳು ಮತ್ತು ಜಿಲ್ಲೆಯ ಎಲ್ಲ ಅಣೆಕಟ್ಟುಗಳಲ್ಲಿ ಸಂಗ್ರಹವಾಗಿರುವ ನೀರನ್ನು ತಡೆಹಿಡಿಯಲು ಹಾಗೂ ಎಚ್ಚರಿಕೆಯಿಂದ ಸರಬರಾಜು ನಿರ್ವಹಿಸಲು ನಿರ್ದೇಶನ ನೀಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ಕೊರತೆ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ” ಎಂದು ಜಿಲ್ಲಾಧಿಕಾರಿ ತಿಳಿಸಿದರು.
“ಹರೇಕಳದಲ್ಲಿ ನೇತ್ರಾವತಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಹೊಸ ಬ್ರಿಡ್ಜ್ ಕಂ ಬ್ಯಾರೇಜ್ ಕಾಮಗಾರಿ ಇನ್ನೂ ಕಾರ್ಯಾರಂಭ ಮಾಡಿಲ್ಲ. ಅಣೆಕಟ್ಟಿನಲ್ಲಿ ನೀರಿನ ಸಂಗ್ರಹ ಪ್ರಾರಂಭವಾದ ನಂತರ ಮಂಗಳೂರು ನಗರದಲ್ಲಿ ನೀರಿನ ಕೊರತೆ ಉಂಟಾಗುವುದಿಲ್ಲ. ಆದರೆ ನೀರನ್ನು ಅದರ ಗರಿಷ್ಠ ಮಟ್ಟಕ್ಕೆ ಸಂಗ್ರಹಿಸುವುದರಿಂದ ಸುತ್ತಮುತ್ತಲಿನ ಪ್ರದೇಶಗಳು ಮುಳುಗಡೆಯಾಗುತ್ತವೆ. ಆದ್ದರಿಂದ, ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭೂಮಿಯನ್ನು ಸ್ವಾಧೀನಪಡಿಸಿಕೊಂಡರೆ ಮಾತ್ರ ಗರಿಷ್ಠ ನೀರಿನ ಸಂಗ್ರಹವನ್ನು ಖಚಿತಪಡಿಸಿಕೊಳ್ಳಬಹುದು. ಈ ಬಗ್ಗೆ ವಿವರವಾದ ಪ್ರಸ್ತಾವನೆ ಸಲ್ಲಿಸುವಂತೆ ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದೇನೆ” ಎಂದು ಮಾಹಿತಿ ನೀಡಿದರು.
“ಮಂಗಳೂರು ಮಹಾನಗರ ಪಾಲಿಕೆಯ ತುಂಬೆ ವೆಂಟೆಡ್ ಅಣೆಕಟ್ಟಿನಿಂದ ಉಳ್ಳಾಲ ನಗರಸಭೆ ಪ್ರದೇಶ, ಮುಲ್ಕಿ ಪಟ್ಟಣ ಪಂಚಾಯಿತಿ, ತುಂಬೆ ಮತ್ತು ಮಂಗಳೂರು ನಡುವಿನ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಿಗೆ ನೀರು ಸರಬರಾಜು ಮಾಡಲಾಗುತ್ತದೆ. 2018-19ರಲ್ಲಿ ತುಂಬೆ ವೆಂಟೆಡ್ ಅಣೆಕಟ್ಟಿನ ಹೂಳನ್ನು ತೆಗೆಯಲಾಗಿದೆ. ಹೂಳು ತೆಗೆಯುವ ಕಾರ್ಯವನ್ನು ಮತ್ತೆ ಕೈಗೊಂಡರೆ ಅಣೆಕಟ್ಟಿನಲ್ಲಿ ನೀರಿನ ಸಂಗ್ರಹವನ್ನು ಹೆಚ್ಚಿಸಬಹುದು. ನೀರು ಸರಬರಾಜಿನಲ್ಲಿ ಉತ್ತಮ ಸಮನ್ವಯವನ್ನು ಖಚಿತಪಡಿಸಿಕೊಳ್ಳಲು, ಎಸಿ ನೇತೃತ್ವದ ಸಮಿತಿಯು ಸಭೆಗಳನ್ನು ನಡೆಸಲಿದೆ” ಎಂದು ಹೇಳಿದರು.
ಈ ಸುದ್ದಿ ಓದಿದ್ದೀರಾ? ದಕ್ಷಿಣ ಕನ್ನಡ | ಕರ್ನಾಟಕ ಒನ್ ಕೇಂದ್ರದಲ್ಲಿ ಸೌಲಭ್ಯ ಕುಂಠಿತ; ವಿಶಿಷ್ಟ ಪ್ರತಿಭಟನೆ ನಡೆಸಿದ ಸಾಮಾಜಿಕ ಕಾರ್ಯಕರ್ತ
“ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (ಎಂಆರ್ಪಿಎಲ್) ಉಪ್ಪುನೀರು ಶುದ್ಧೀಕರಣ ಘಟಕವನ್ನು ಸ್ಥಾಪಿಸಿರುವುದರಿಂದ ತುಂಬೆ ಅಣೆಕಟ್ಟಿನ ಮೇಲಿನ ಒತ್ತಡ ಕಡಿಮೆಯಾಗಿದೆ” ಎಂದು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.