ಕಿತ್ತೂರು ರಾಣಿ ಚೆನ್ನಮ್ಮನ ಜಯಂತಿ ಆಚರಣೆ ಮಾಡದೆ ಕುಂದಗೋಳ ತಾಲೂಕು ಶಿಕ್ಷಣ ಇಲಾಖೆ ಸ್ವಾತಂತ್ರ್ಯ ಹೋರಾಟಗಾರರಿಗೆ ಅವಮಾನ ಮಾಡಿದೆ. ಈ ಕೂಡಲೇ ಅಧಿಕಾರಿಗಳ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ʼವೀರರಾಣಿ ಕಿತ್ತೂರು ಚೆನ್ನಮ್ಮ ಸೇವಾ ಸಮಿತಿʼ ಆಗ್ರಹಿಸಿದೆ.
ತಹಸೀಲ್ದಾರ ನಿರ್ದೇಶನವನ್ನು ಪಾಲಿಸದ ಅಧಿಕಾರಿಗಳ ಮೇಲೆ ಈ ಕೂಡಲೆ ಕಾನೂನು ಕ್ರಮ ಕೈಗೊಳ್ಳ ಬೇಕು ಎಂದು ತಹಸೀಲ್ದಾರರಿಗೆ ಅಕ್ಟೋಬರ್ 25, ಬುಧವಾರದಂದು ವಿನಂತಿಸಿಕೊಂಡಿತು. ಈ ಕುರಿತು ಕೈಕೊಳ್ಳುವ ಕ್ರಮದ ಬಗ್ಗೆ ಸ್ಪಷ್ಟನೆ ನೀಡಬೇಕು, ಇಲ್ಲವಾದಲ್ಲಿ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ಮುಂದಿನ ಹೋರಾಟದ ಕ್ರಮವನ್ನು ಕೈಗೊಳ್ಳಲಾಗುವುದು ಎಂದು ಹೋರಾಟಗಾರರು ಎಚ್ಚರಿಸಿದ್ದಾರೆ.
ಈದಿನ.ಕಾಮ್ ಜೊತೆ ಮಾತನಾಡಿದ ತಾಲೂಕು ರೈತ ಸಂಘದ ಅಧ್ಯಕ್ಷ ಗುರುಪಾದಪ್ಪ ಬಂಕದ, ಕುಂದಗೋಳ ತಾಲೂಕು ಕ್ಷೇತ್ರ ಶಿಕ್ಷಣ ಇಲಾಖೆಯಲ್ಲಿ, ಸ್ವಾತಂತ್ರ್ಯ ಹೋರಾಟಕ್ಕೆ ಭದ್ರ ಬುನಾದಿ ಹಾಕಿದ್ದ ವೀರರಾಣಿ ಕಿತ್ತೂರ ಚೆನ್ನಮ್ಮನ ಸ್ಮರಣಾರ್ಥ ಕಾರ್ಯಕ್ರಮವನ್ನು ಶಿಕ್ಷಣ ಕ್ಷೇತ್ರದಿಂದ ಆಚರಿಸದೇ ಇರುವುದು ದುರಂತದ ಸಂಗತಿ. ಈ ಮೂಲಕ ಚೆನ್ನಮ್ಮನ ಜಯಂತಿಯ ದಿನದಂದು ಸರ್ಕಾರಿ ಕಚೇರಿಗಳಿಗೆ ಬೀಗ ಜಡಿದು ಸ್ವಾತಂತ್ರ್ಯ ಹೋರಾಟಗಾರರಿಗೆ ಅವಮಾನ ಮಾಡಿರುವುದನ್ನು ನಾವು ಸಹಿಸುವುದಿಲ್ಲ. ಇಲಾಖೆಯ ಬಿಇಓ ಅವರ ನಡೆ ಉದ್ದೇಶಪೂರ್ವಕವಾಗಿದೆ ಎಂದು ಆರೋಪಿಸಿದರು.