ಕರ್ತವ್ಯದಲ್ಲಿದ್ದ ಅರಣ್ಯಾಧಿಕಾರಿಯನ್ನು ಸಾರ್ವಜನಿಕವಾಗಿ ಅವಮಾನಿಸಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಕ್ಷೇತ್ರದ ಬಿಜೆಪಿ ಶಾಸಕ ಹರೀಶ್ ಪೂಂಜಾ ಅವರ ಮೇಲೆ ಎಫ್ಐಆರ್ ದಾಖಲಾಗಿದೆ. ಅರಣ್ಯಾಧಿಕಾರಿ ಜಯಪ್ರಕಾಶ್ ಕೆ ಕೆ ದೂರಿನ ಹಿನ್ನೆಲೆಯಲ್ಲಿ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಳೆದ ಅಕ್ಟೋಬರ್ 8ರಂದು ಚಾರ್ಮಾಡಿ ಭಾಗದ ಅರಣ್ಯ ಪ್ರದೇಶದಲ್ಲಿ ಮನೆ ನಿರ್ಮಾಣ-ತೆರವು ಸಂಬಂಧ ಅರಣ್ಯಾಧಿಕಾರಿಗಳು-ಶಾಸಕರ ನಡುವೆ ವಾಗ್ವಾದ ನಡೆದಿತ್ತು. ಈ ವೇಳೆ ಅರಣ್ಯಾಧಿಕಾರಿ ಜಯಪ್ರಕಾಶ್ ಅವರನ್ನು ‘ಲೋಫರ್ ನನ್ ಮಗ’ ಅಂತ ಹೀಯಾಳಿಸಿ, ಅವಮಾನಿಸಿದ್ದರು. ಇದರ ವಿಡಿಯೋ ಸೋಷಿಯಲ್ ಮೀಡಿಯಾಗಳಲ್ಲೂ ವೈರಲ್ ಆಗಿತ್ತು.
ಸಂಸ್ಕೃತಿ, ಸಂಪ್ರದಾಯ, ಪರಂಪರೆ ಎಂದು ದೊಡ್ಡ ದೊಡ್ಡ ಪದಗಳನ್ನು ಬಳಸುವ ಬಿಜೆಪಿಯ ಅಸಲಿ ಸಂಸ್ಕೃತಿ
ಅವಾಚ್ಯ ಶಬ್ದಗಳನ್ನು ಬಳಸುತ್ತಾ, ಅಸಭ್ಯವಾಗಿ ನಡೆದುಕೊಳ್ಳುವುದು!ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಬಿಜೆಪಿ ಶಾಸಕ ಹರೀಶ್ ಪೂಂಜಾ ಬೀದಿ ಪೋಕರಿಗಳಿಗಳಂತೆ ಅರಣ್ಯ ಅಧಿಕಾರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ.
ಶಾಸಕನಾದವನಿಗೆ… pic.twitter.com/opkpWWhoWV
— Karnataka Congress (@INCKarnataka) October 10, 2023
ಇದರಿಂದ ಅವಮಾನಗೊಂಡಿದ್ದ ಅರಣ್ಯಾಧಿಕಾರಿ ಜಯಪ್ರಕಾಶ್ ಶಾಸಕ ಪೂಂಜಾ ಹಾಗೂ ಬೆಂಬಲಿಗರ ವಿರುದ್ಧ ಧರ್ಮಸ್ಥಳದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಐಪಿಸಿ 1860(ಯು/ಎಸ್-143, 353, 504 (ಶಾಂತಿ ಭಂಗವನ್ನು ಪ್ರಚೋದಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಅವಮಾನ, 149) ಅಡಿ ಪ್ರಕರಣ ದಾಖಲಾಗಿದೆ. ಎಫ್ಐಆರ್ ದಾಖಲಾಗಿರುವ ಹಿನ್ನೆಲೆಯಲ್ಲಿ ಬೆಳ್ತಂಗಡಿ ಕ್ಷೇತ್ರದ ಬಿಜೆಪಿ ಶಾಸಕ ಹರೀಶ್ ಪೂಂಜಾ ಅವರು ಬಂಧನದ ಭೀತಿಯಲ್ಲಿದ್ದಾರೆ.
ಬಡವರ ರಕ್ಷಣೆಗಾಗಿ ಜೈಲಿಗೆ ಹೋಗಲು ಸಿದ್ಧ: ಶಾಸಕ ಹರೀಶ್ ಪೂಂಜಾ
ಇನ್ನು ಎಫ್ಐಆರ್ ದಾಖಲಾಗಿರುವ ಬಗ್ಗೆ ಫೇಸ್ಬುಕ್ನಲ್ಲಿ ಪೋಸ್ಟ್ ಹಾಕಿರುವ ಶಾಸಕ ಹರೀಶ್ ಪೂಂಜಾ, ‘ಬಡವರ ರಕ್ಷಣೆಗಾಗಿ ಜೈಲಿಗೆ ಹೋಗಲು ಸಿದ್ಧ’ ಎಂದು ಬರೆದುಕೊಂಡಿದ್ದಾರೆ.
ತಮ್ಮ ಪೋಸ್ಟ್ನಲ್ಲಿ, ‘ನೋಡೇ ಬಿಡೋಣ. ನಾನು ಶಾಸಕನಾಗಿರುವುದು ನನ್ನ ಜನರ ಸೇವೆಗೆ ಮತ್ತು ಅವರ ರಕ್ಷಣೆಗೆ ಜೈಲಿಗೆ ಹೋಗಲು ಸಿದ್ಧ. ಬಾಲ್ಯದಿಂದಲೂ ಸುಭಾಷ್ ಚಂದ್ರ ಬೋಸ್, ಸರ್ದಾರ್ ಪಟೇಲ್, ವೀರ ಸಾವರ್ಕರ್, ಭಗತ್ ಸಿಂಗ್ ಮುಂತಾದವರನ್ನು ಆದರ್ಶವಾಗಿ ಇಟ್ಟುಕೊಂಡು, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ದಿನಗಳಿಂದ ಜನ ಸೇವೆ, ಜನರಿಗಾಗಿ ಸಂಘರ್ಷ ಮಾಡಿಕೊಂಡು ನಾಯಕನಾದವನು. ನಾನು ಜನರಿಂದ ಶಾಸಕನಾಗಿ, ಜನರಿಗೋಸ್ಕರ ಇರುವವನು ಅದಕ್ಕಾಗಿ ಯಾವ ಬೆಲೆ ತೆರಲು ಸಿದ್ದ’ ಎಂದಿದ್ದಾರೆ.
‘ನನ್ನ ವಿಧಾನಸಭಾ ಕ್ಷೇತ್ರದಲ್ಲಿ, ಅರಣ್ಯದ ಅಂಚಿನಲ್ಲಿ, ನೂರು ವರ್ಷಕ್ಕಿಂತಲೂ ಹಿಂದಿನಿಂದ ಕೃಷಿ ಚಟುವಟಿಕೆ ಮಾಡುತ್ತಾ ಬಂದಿದ್ದ ಕಳೆಂಜದ ದೇವಣ್ಣ ಗೌಡ ಅವರ ಕುಟುಂಬವನ್ನು ಒಕ್ಕಲೆಬ್ಬಿಸಲು ಯತ್ನಿಸಿದ ಅರಣ್ಯ ಇಲಾಖೆಯ ವಿರುದ್ಧ ಜಿಲ್ಲೆಯ ಭಾರತೀಯ ಜನತಾ ಪಕ್ಷದ ಶಾಸಕ ಮಿತ್ರರೊಂದಿಗೆ ಮತ್ತು ಕಾರ್ಯಕರ್ತರೊಂದಿಗೆ ಸೇರಿ ಪ್ರತಿಭಟಿಸಿ ಬಡ ಕುಟುಂಬವನ್ನು ಒಕ್ಕಲೆಬ್ಬಿಸುವುದರಿಂದ ತಡೆದಿದ್ದೆವು. ನೂರಾರು ವರ್ಷಗಳಿಂದ ಬದುಕು ಕಟ್ಟಿಕೊಂಡಿದ್ದ ಮನೆಯವರ ಪರವಾಗಿ ನಾನೊಬ್ಬ ಜನಪ್ರತಿನಿಧಿಯಾಗಿ ಧ್ವನಿ ಎತ್ತಿದ್ದು ತಪ್ಪಾಯಿತೇ? ನನ್ನ ಕ್ಷೇತ್ರದ ಜನರ ಪರವಾಗಿ ಹೋರಾಡುವ ಹಕ್ಕು ನನಗಿಲ್ಲವೇ? ನನ್ನ ಜನ ನನ್ನಲ್ಲಿ ಸಮಸ್ಯೆ ಹೇಳಿಕೊಂಡಾಗ ಸುಮ್ಮನಿರಬೇಕೆ? ಹೀಗಾದರೆ ಸಾಮಾನ್ಯ ಜನರ ಗತಿಯೇನು? ಜನರ ಸಮಸ್ಯೆಗೆ ಧ್ವನಿಯಾದ ಒಬ್ಬ ಜನಪ್ರತಿನಿಧಿಯನ್ನು ಹೀಗೆಲ್ಲ ಕಾಡುವುದಾದರೆ ಜನಸಾಮಾನ್ಯರು ಕಾಂಗ್ರೆಸ್ ಸರ್ಕಾರದಡಿಯಲ್ಲಿ ಹೇಗೆ ಬದುಕಬೇಕು? ಮಾನ್ಯ ಮುಖ್ಯಮಂತ್ರಿಗಳೇ, ಅರಣ್ಯ ಸಚಿವರೇ ನಿಮ್ಮ ಈ ಬೆದರಿಕೆ ತಂತ್ರಗಳಿಗೆ ನಾನು ಬೆದರುವುದಿಲ್ಲ. ಮತ್ತೆ ಹೇಳುತ್ತಿದ್ದೇನೆ ಬಡವರಿಗಾಗಿ ಇಂತಹ ನೂರು ಕೇಸು ಹಾಕಿಸಿಕೊಳ್ಳುವುದಕ್ಕೂ ಸಿದ್ಧನಿದ್ದೇನೆ, ಜೈಲು ಸೇರಲೂ ತಯಾರಿದ್ದೇನೆ’ ಎಂದು ಪೋಸ್ಟ್ನಲ್ಲಿ ಬರೆದುಕೊಂಡಿದ್ದಾರೆ.