- ಸ್ಪೀಕರ್ ವಿರುದ್ಧ ಅವಿಶ್ವಾಸ ಮಂಡನೆಗೆ ಅವಕಾಶ ಕೇಳಿದ್ದೇವೆ: ಬೊಮ್ಮಾಯಿ
- ಕಾಂಗ್ರೆಸ್ ನೇತೃತ್ವದ ಸರ್ಕಾರದ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ರಾಜ್ಯಪಾಲರಿಗೆ ದೂರು
2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲಿಸುವ ಉದ್ದೇಶದಿಂದ ಬೆಂಗಳೂರಿನಲ್ಲಿ ನಡೆದ ಕಾಂಗ್ರೆಸ್ ಮಿತ್ರಪಕ್ಷಗಳ ಸಭೆಯಲ್ಲಿ ಐಎಎಸ್ ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂದು ಆರೋಪಿಸಿ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಗುರುವಾರ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಮನವಿ ಸಲ್ಲಿಸಿದರು.
ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಸಿ ಟಿ ರವಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸುನೀಲ್ ಕುಮಾರ್, ರಮೇಶ್ ಜಾರಕಿಹೊಳಿ ಹಾಗೂ ಪ್ರಭು ಚೌಹಾಣ್ ಸೇರಿದಂತೆ ಬಿಜೆಪಿ ಪರಿಷತ್ ಸದಸ್ಯರು ಸಹ ರಾಜಭವನಕ್ಕೆ ತೆರಳಿ ದೂರು ನೀಡಿದರು.
ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ, ಎಚ್ ಡಿ ರೇವಣ್ಣ ಸೇರಿದಂತೆ ಜೆಡಿಎಸ್ ಶಾಸಕರು ಸಹ ಬಿಜೆಪಿ ಜತೆಗೂಡಿ ಕಲಾಪ ಸುಗಮವಾಗಿ, ನಿಷ್ಪಕ್ಷಪಾತವಾಗಿ ನಡೆಸಲು ಸ್ಪೀಕರ್ ವಿಫಲವಾಗಿದ್ದಾರೆ ಎಂದು ಆರೋಪಿಸಿ ರಾಜ್ಯಪಾಲರಿಗೆ ದೂರು ನೀಡಿದರು. ಈ ಸಂದರ್ಭದಲ್ಲಿ ಬಿಜೆಪಿ, ಜೆಡಿಎಸ್ ನ ಶಾಸಕರು ಹಾಗೂ ಪರಿಷತ್ ಸದಸ್ಯರು ಉಪಸ್ಥಿತರಿದ್ದರು.
ಐಎಎಸ್ ಅಧಿಕಾರಿಗಳ ದುರ್ಬಳಕೆ ಮಾಡಿಕೊಂಡಿರುವ ರಾಜ್ಯ ಸರ್ಕಾರ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಜ್ಯಪಾಲರಿಗೆ ನೀಡಿರುವ ಬಿಜೆಪಿಯ ಲೆಟರ್ ಹೆಡ್ ಗೆ ಕುಮಾರಸ್ವಾಮಿ ಅವರು ಸಹಿ ಮಾಡಿದ್ದಾರೆ.
ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿ ಅಥವಾ ಹೊರಗಿನಿಂದ ಬೆಂಬಲ ಕುರಿತ ಚರ್ಚೆ ರಾಜಕೀಯ ವಲಯದಲ್ಲಿ ಪ್ರಾರಂಭವಾಗಿರುವ ಬಿನ್ನಲೇ ಬಿಜೆಪಿ ಹೋರಾಟಕ್ಕೆ ಬೆಂಬಲ ನೀಡುತ್ತಿರುವುದು, ಅಧಿಕೃತ ಲೆಟರ್ಹೆಡ್ಗೆ ಸಹಿ ಮಾಡಿರುವುದು ಕುತೂಹಲಕ್ಕೆ ಕಾರಣವಾಗಿದೆ.
ರಾಜ್ಯದಲ್ಲಿ ಚುನಾವಣೆ ಮುಗಿದು ಎರಡು ತಿಂಗಳು ಪೂರೈಸಿದರೂ ಬಿಜೆಪಿ ಇನ್ನೂ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಿಲ್ಲ. ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡರೆ ಎಚ್ ಡಿ ಕುಮಾರಸ್ವಾಮಿ ಅವರಿಗೆ ವಿಪಕ್ಷ ನಾಯಕ ಸ್ಥಾನ ನೀಡಬಹುದು ಎನ್ನುವ ಮಾತು ಕೂಡ ಹರಿದಾಡುತ್ತಿದೆ.
ಇನ್ನು ಸದನದ ಒಳಗಡೆ ಹಾಗೂ ಹೊರಗೆ ಉಭಯ ಪಕ್ಷಗಳು ಒಗ್ಗಟ್ಟಾಗಿದ್ದು, ಕಾಂಗ್ರೆಸ್ ವಿರುದ್ಧ ಜಂಟಿಯಾಗಿ ಹೋರಾಟಕ್ಕಿಳಿದಿದೆ. ಮೈತ್ರಿಯ ಸುದ್ದಿ ಬೆನ್ನಲ್ಲೇ ಇಬ್ಬರ ಹೊಂದಾಣಿಕೆ ಹೋರಾಟ ಚರ್ಚೆಗೆ ಗ್ರಾಸವಾಗಿದೆ.
ರಾಜ್ಯಪಾಲರಿಗೆ ದೂರು ನೀಡುವ ಮುನ್ನ ಬಿಜೆಪಿ ನಾಯಕರು 10 ಶಾಸಕರನ್ನು ವಿಧಾನಸಭೆಯಿಂದ ಅಮಾನತು ಮಾಡಿರುವುದನ್ನು ಖಂಡಿಸಿ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದರು.
ಸ್ಪೀಕರ್ ವಿರುದ್ಧ ಅವಿಶ್ವಾಸ ಮಂಡನೆಗೆ ಅವಕಾಶ ಕೇಳಿದ್ದೇವೆ: ಬೊಮ್ಮಾಯಿ
ಸ್ಪೀಕರ್ ಆದವರು ರಾಜಕೀಯ ಪಕ್ಷಗಳ ಕಾರ್ಯಕ್ರಮಗಳಲ್ಲಿ ಹಾಜರಾಗಬಾರದು ಎಂಬುದನ್ನು ಪಾಲಿಸಿಕೊಂಡು ಬರಲಾಗಿದೆ. ಇವರು ಕಾಂಗ್ರೆಸ್ ಪಕ್ಷದ ಔತಣಕೂಟಕ್ಕೆ ಹಾಜರಾಗಿ ಊಟ ಮಾಡಿ ಬಂದಿದ್ದಾರೆ. ಅವರ ಮೇಲೆ ವಿಶ್ವಾಸ ಇಲ್ಲ ಎಂದು ನಾವು ಅವಿಶ್ವಾಸ ಮಂಡನೆಗೆ ಅವಕಾಶ ಕೇಳಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ರಾಜ್ಯಪಾಲರ ಭೇಟಿಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಬೊಮ್ಮಾಯಿ, ಈ ಸರ್ಕಾರ ತನ್ನ ತಪ್ಪುಗಳನ್ನು ಮುಚ್ಚಿಕೊಳ್ಳಲು ಈ ರೀತಿ ಮಾಡುತ್ತಿದೆ. ಜನರು ಅವರಿಗೆ ಅಧಿಕಾರ ನೀಡಿದ್ದರೆ ಜನರ ಪರವಾಗಿ ಧ್ವನಿ ಎತ್ತಲು ನಮಗೂ ಅವಕಾಶ ಕೊಟ್ಟಿದ್ದಾರೆ ಎಂದು ಹೇಳಿದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಜೈನ ಮುನಿಗಳ ಹತ್ಯೆಯಿಂದ ಹಿಡಿದು ರಾಜ್ಯದಲ್ಲಿ ನಿರಂತರ ಕೊಲೆ ನಡೆಯುತ್ತಿವೆ. ಬರಗಾಲ ಬಿದ್ದಿದೆ. ಮೂರುವರೆ ಸಾವಿರ ಹಳ್ಳಿಗಳಲ್ಲಿ ಕುಡಿಯುವ ನೀರಿಲ್ಲ. ಇದರ ಬಗ್ಗೆ ಸದನದಲ್ಲಿ ಚೆರ್ಚೆಗೆ ಅವಕಾಶ ಕೊಡಲಿಲ್ಲ ಎಂದು ಆರೋಪಿಸಿದರು.
ಈ ಸುದ್ದಿ ಓದಿದ್ದೀರಾ? ರಾಜ್ಯಪಾಲರ ಭೇಟಿ ಮಾಡಿದ ಸ್ಪೀಕರ್ – ಡೆಪ್ಯೂಟಿ ಸ್ಪೀಕರ್: ಸದನದಲ್ಲಿ ನಡೆದ ಘಟನೆ ಬಗ್ಗೆ ವರದಿ ಸಲ್ಲಿಕೆ
ರಾಜಕೀಯ ಪಕ್ಷದ ಕಾರ್ಯಕ್ರಮಕ್ಕೆ ಬೇರೆ ರಾಜ್ಯಗಳ ನಾಯಕರ ಸ್ವಾಗತಕ್ಕೆ ಐಎಎಸ್ ಅಧಿಕಾರಿಗಳನ್ನು ಕಳುಹಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ನಮ್ಮ ಪಕ್ಷದ ಹತ್ತು ಮಂದಿ ಸದಸ್ಯರನ್ನು ಅಮಾನತು ಮಾಡಿದ್ದಾರೆ. ಇಂತ ಕೆಟ್ಟ ನಿರ್ಧಾರ ಇತಿಹಾಸದಲ್ಲಿ ಆಗಿಲ್ಲ. ರಾಜಕೀಯ ಲಾಭಕ್ಕೆ ಕಾಂಗ್ರೆಸ್ ಸ್ಪೀಕರ್ ಹುದ್ದೆ ಬಳಕೆ ಮಾಡಿಕೊಳ್ಳುತ್ತಿದೆ ಎಂದು ದೂರಿದರು.
ಸದ್ಯ ಸ್ಪೀಕರ್ ಹುದ್ದೆ ದುರುಪಯೋಗ ಆಗುತ್ತಿದೆ. ಸ್ಪೀಕರ್ ಅವರು ನಮ್ಮನ್ನು ಕರೆದು ಮಾತನಾಡಿಸಿ ಸಮಸ್ಯೆ ಬಗೆಹರಿಸಬಹುದಿತ್ತು. ಈ ರೀತಿಯ ಪ್ರಕರಣಗಳು ಹಿಂದೆಯೂ ನಡೆದಿವೆ. ಈ ರೀತಿಯ ತೀರ್ಮಾನ ಯಾರೂ ಮಾಡಿರಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಟೆರೆರಿಸ್ಟ್ ಚಟುವಟಿಕೆಗಳು ನಡೆಯುತ್ತಿವೆ. ಅವರ ಬಳಿ ಸಿಕ್ಕಿರುವ ದಾಖಲೆ ನೋಡಿದರೆ ಅವರಿಗೆ ಅಂತಾರಾಷ್ಟ್ರೀಯ ಸಂಪರ್ಕ ಇದೆ. ಹೀಗಾಗಿ ಈ ಪ್ರಕರಣವನ್ನು ಎನ್ಐಎಗೆ ವಹಿಸಬೇಕು ಎಂದು ನಾವು ಆಗ್ರಹಿಸಿದ್ದೇವೆ. ಈ ಎಲ್ಲ ಮಾಹಿತಿಗಳನ್ನು ರಾಜ್ಯಪಾಲರ ಗಮನಕ್ಕೆ ತಂದಿದ್ದೇವೆ. ಅವರು ಕೇಂದ್ರ ಸರ್ಕಾರಕ್ಕೆ ವರದಿ ಕೊಡುವುದಾಗಿ ಹೇಳಿದ್ದಾರೆ ಎಂದರು.
ನಮ್ಮ ಸದಸ್ಯರನ್ನು ಅಮಾನತು ಮಾಡಿರುವುದರಿಂದ ಸದನವನ್ನು ಬಹಿಷ್ಕರಿಸುತ್ತೇವೆ. ಈ ಪ್ರಕರಣವನ್ನು ಜಿಲ್ಲಾ ಮಟ್ಟಕ್ಕೆ ತೆಗೆದುಕೊಂಡು ಹೋಗಿ ಹೋರಾಟ ಮಾಡುತ್ತೇವೆ ಎಂದು ಹೇಳಿದರು