ಕೇಂದ್ರ ಸರ್ಕಾರ ಜಾರಿ ಮಾಡಿರುವ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವೋಟ್ ಬ್ಯಾಂಕ್ ಮತ್ತು ತುಷ್ಟೀಕರಣದ ರಾಜಕಾರಣಕ್ಕಾಗಿ ಕಾಂಗ್ರೆಸ್ ವಿರೋಧಿಸುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ತೆಲಂಗಾಣದ ಹೈದರಾಬಾದ್ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, “ನಾವು ಸಿಎಎ ಜಾರಿ ಮಾಡುವುದಾಗಿ ಹೇಳಿದೆವು. ಆದರೆ ಕಾಂಗ್ರೆಸ್ ಅದನ್ನು ವಿರೋಧಿಸಿತು. ಭಾರತಕ್ಕೆ ವಲಸೆ ಬಂದವರಿಗೆ ಧರ್ಮಾಧರಿತವಾಗಿ ಪೌರತ್ವ ನೀಡಬೇಕು ಎಂಬುದು ಸ್ವಾತಂತ್ರ್ಯ ಬಂದಾಗಿನಿಂದಲೂ ಕಾಂಗ್ರೆಸ್ ಹಾಗೂ ಸಂವಿಧಾನ ಕತೃಗಳ ವಾಗ್ದಾನವಾಗಿತ್ತು. ಆದರೆ ಈಗ ವೋಟ್ಬ್ಯಾಂಕ್ಗಾಗಿ ಕಾಂಗ್ರೆಸ್ ಇದನ್ನು ವಿರೋಧಿಸುತ್ತಿದೆ” ಎಂದು ಅವರು ಆರೋಪಿಸಿದರು.
ಸಿಎಎ ಜಾರಿ ಮಾಡಿದ್ದಕ್ಕೆ ಪ್ರಧಾನಿ ಮೋದಿ ಅವರಿಗೆ ಧನ್ಯವಾದ ಅರ್ಪಿಸಿದ ಅಮಿತ್ ಶಾ, “ದೇಶಕ್ಕೆ ವಲಸೆ ಬಂದಿರುವವರಿಗೆ ಪೌರತ್ವ ನೀಡದಿದ್ದರೆ ಅವರನ್ನು ಅವಮಾನಿಸಿದಂತಾಗುತ್ತದೆ. ಸಿಎಎ ಜಾರಿ ಮಾಡುವ ಮೂಲಕ ಪ್ರಧಾನಿ ಮೋದಿ ಅವರು ಹಿಂದೂ, ಬೌದ್ಧ, ಸಿಖ್ ಮತ್ತು ಜೈನ ಸಮುದಾಯದವರನ್ನು ಮೋದಿ ಗೌರವಿಸಿದ್ದಾರೆ. ಸಿಎಎ ಜಾರಿಯಿಂದ ಅಲ್ಪಸಂಖ್ಯಾತ ಸಮುದಾಯದ ಪ್ರಜೆಗಳು ಯಾವುದೇ ಕಾರಣಕ್ಕೂ ಪೌರತ್ವವನ್ನು ಕಳೆದುಕೊಳ್ಳುವುದಿಲ್ಲ” ಎಂದು ಅಮಿತ್ ಶಾ ಹೇಳಿಕೆ ನೀಡಿದ್ದಾರೆ.
ಇದನ್ನು ಓದಿದ್ದೀರಾ? ಸಿಎಎ ಜಾರಿ | ಪಾಕಿಸ್ತಾನದವ ನಿಮ್ಮ ಮನೆ ಬಳಿ ಬಂದು ಮೊಕ್ಕಾಂ ಹೂಡಿದರೆ ಸುಮ್ಮನಿರ್ತೀರಾ? ಕೇಜ್ರಿವಾಲ್
ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿಗೊಳಿಸುವುದಾಗಿ ನೀಡಿದ್ದ ಭರವಸೆಯನ್ನು ಮೋದಿ ಸರಕಾರವು ನಿನ್ನೆ ಜಾರಿಗೊಳಿಸಿದೆ ಎಂದು ಅಮಿತ್ ಶಾ ತಿಳಿಸಿದರು.