ಬಡವರು ತಮ್ಮ ಭವಿಷ್ಯವನ್ನು ಭದ್ರಪಡಿಸಿಕೊಳ್ಳಲು ಕಾಂಗ್ರೆಸ್ಗೆ ಮತ ಚಲಾಯಿಸಿದ ಏಕೈಕ ಕಾರಣಕ್ಕೆ ಕರ್ನಾಟಕಕ್ಕೆ ಅಕ್ಕಿ ಕೊಡದೇ ಶಿಕ್ಷೆ ನೀಡುತ್ತಿರುವುದು ರಾಜ್ಯದ ದೌರ್ಭಾಗ್ಯವಲ್ಲದೆ ಮತ್ತೇನಲ್ಲ ಎಂದು ರಾಜ್ಯಸಭಾ ಸದಸ್ಯ ಜೈರಾಮ್ ರಮೇಶ್ ಅವರು ಕೇಂದ್ರ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, “ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾದ ಬೆನ್ನಲ್ಲೇ ಬಿಜೆಪಿ ಅಧ್ಯಕ್ಷ ಜೆ ಪಿ ನಡ್ಡಾ ಅವರ ಬೆದರಿಕೆಯಂತೆ ಕರ್ನಾಟಕಕ್ಕೆ ಹೆಚ್ಚುವರಿ ಅಕ್ಕಿಯನ್ನು ನೀಡಲು ನಿರಾಕರಿಸಲಾಗಿದೆ” ಎಂದು ದೂರಿದ್ದಾರೆ.
“ಜನವರಿ 1, 2023 ರಿಂದ ಮೇ 24, 2023 ರವರೆಗೆ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರವು ಕರ್ನಾಟಕವೊಂದರಿಂದಲೇ ಎಲ್ಲ ರಾಜ್ಯ ಸರ್ಕಾರಗಳು ಮುಕ್ತ ಮಾರುಕಟ್ಟೆ ಮಾರಾಟ ಯೋಜನೆ (ದೇಶೀಯ) ಅಡಿಯಲ್ಲಿ ಪ್ರತಿ ಕ್ವಿಂಟಲ್ಗೆ 3,400 ದರದಲ್ಲಿ ಸಂಗ್ರಹಿಸಿದ ಶೇ 95 ಕ್ಕಿಂತ ಹೆಚ್ಚು ಅಕ್ಕಿಯನ್ನು ತೆಗೆದುಕೊಂಡಿದೆ. ಬಹುಶಃ ಇದು ಮೋದಿಜೀಯವರ ಆಶೀರ್ವಾದದಿಂದಲೇ ಆಗಿರಬೇಕು” ಎಂದು ಹರಿಹಾಯ್ದಿದ್ದಾರೆ.
“ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜನರ ಹಕ್ಕುಗಳನ್ನು ರಕ್ಷಿಸಲು ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ಮಾಡುತ್ತದೆ. ಜತೆಗೆ, ಪ್ರತಿಯೊಬ್ಬರಿಗೂ ತಲಾ 10 ಕೆ.ಜಿ. ಅಕ್ಕಿ ಉಚಿತವಾಗಿ ನೀಡಲು ಅನ್ನಭಾಗ್ಯ 2.0 ಖಾತ್ರಿಯನ್ನು ಶೀಘ್ರವಾಗಿ ಜಾರಿಗೆ ತರಲಾಗುತ್ತದೆ” ಎಂದು ಭರವಸೆ ನೀಡಿದ್ದಾರೆ.