ರೈಲು ದುರಂತಕ್ಕೆ 288 ಮಂದಿ ಪ್ರಯಾಣಿಕರು ಬಲಿ
ಸಾವಿರಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯ
ಒಡಿಶಾದ ಬಾಲಸೋರ್ ರೈಲು ದುರಂತದಲ್ಲಿ ಸಾವನ್ನಪ್ಪಿದವರ ಕುಂಟುಂಬಕ್ಕೆ ಅಮೆರಿಕಾದ ಅಧ್ಯಕ್ಷ ಜೋ ಬೈಡನ್, ಬ್ರಿಟನ್ ಪ್ರಧಾನಿ ರಿಷಿ ಸುನಕ್, ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಸೇರಿದಂತೆ ಜಗತ್ತಿನ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.
ಬಾಲಸೋರ್ನಲ್ಲಿ ಶುಕ್ರವಾರ ತಡರಾತ್ರಿ ನಡೆದ ರೈಲು ದುರಂತದಲ್ಲಿ 288 ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದು, ಸಾವಿರಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಸಾವಿನ ಸಂಖ್ಯೆ ಹೆಚ್ಚು ಸಾಧ್ಯತೆ ಇದೆ.
ಘಟನೆಗೆ ಸಂಬಂಧಿಸಿ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಬೈಡನ್, “ಭಾರತದಲ್ಲಿ ಜರುಗಿದ ರೈಲು ಅಪಘಾತದ ಬಗ್ಗೆ ತಿಳಿದು ನಾನು ಮತ್ತು ನನ್ನ ಪತ್ನಿ ಜಿಲ್ ಇಬ್ಬರೂ ಆಘಾತಕ್ಕೊಳಗಾಗಿದ್ದೇವೆ” ಎಂದಿದ್ದಾರೆ. ಈ ದುರಂತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಾಂತ್ವಾನ ಹೇಳಿರುವ ಬೈಡನ್, ಗಾಯಾಳುಗಳು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸಿದ್ದಾರೆ.
ಬ್ರಿಟನ್ ಪ್ರಧಾನಿ ರಿಷಿ ಸುನಕ್ ಟ್ವೀಟ್ ಮಾಡಿ, “ರೈಲು ದುರಂತದಲ್ಲಿ ತಮ್ಮವರನ್ನು ಕಳೆದುಕೊಂಡ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಾಳುಗಳು ಬೇಗ ಗುಣಮುಖರಾಗಲಿ” ಎಂದು ಪ್ರಾರ್ಥಿಸಿದ್ದು, ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗಿಯಾದವರನ್ನು ಶ್ಲಾಘಿಸಿದ್ದಾರೆ.
ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಕೂಡ ಪತ್ರಿಕಾ ಪ್ರಕಟಣೆ ಹೊರಡಿಸುವ ಮೂಲಕ ರೈಲು ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಸಾಂತ್ವಾನ ಹೇಳಿದ್ದಾರೆ. ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದಾರೆ.
ಫ್ರಾನ್ಸ್ನ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಕೂಡ ಟ್ವೀಟ್ ಮಾಡಿ, “ಪ್ರಧಾನಿ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಒಡಿಶಾದಲ್ಲಿ ನಡೆದ ರೈಲು ದುರಂತದಲ್ಲಿ ಸಾವನ್ನಪಿದವರ ಕುಟುಂಬಕ್ಕೆ ನನ್ನ ಸಂತಾಪಗಳು. ಇಂತಹ ಸಮಯದಲ್ಲಿ ಫ್ರಾನ್ಸ್, ಭಾರತದ ಬೆಂಬಲಕ್ಕೆ ನಿಲ್ಲಲಿದೆ” ಎಂದಿದ್ದಾರೆ.