- ಸುದೀಪ್ ಬಿಜೆಪಿ ಸೇರ್ಪಡೆಯ ಸುದ್ದಿ ಸುಳ್ಳೆಂದ ಪ್ರಕಾಶ್ ರಾಜ್
- ಬಿಜೆಪಿ ಸೋಲಿನ ಭಯದಲ್ಲಿದೆ ಎಂದ ಬಹುಭಾಷಾ ನಟ
ಸ್ಟಾರ್ ನಟ ಕಿಚ್ಚ ಸುದೀಪ್ ಬಿಜೆಪಿ ಸೇರಲಿದ್ದಾರೆ ಎಂಬ ಸುದ್ದಿ ಸದ್ಯ ಸಿನಿಮಾ ಮತ್ತು ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆಗಳನ್ನು ಹುಟ್ಟು ಹಾಕಿದೆ. ನಟನಾಗಿಯೇ ಅಪಾರ ಕೀರ್ತಿ ಗಳಿಸಿರುವ ಸುದೀಪ್ ಅವರಿಗೆ ರಾಜಕೀಯ ಯಾಕೆ ಬೇಕಿತ್ತು ಎಂಬ ಮಾತುಗಳು ಅಭಿಮಾನಿಗಳ ವಲಯದಲ್ಲಿ ಕೇಳಿ ಬರುತ್ತಿವೆ. ಇದೇ ಹೊತ್ತಿನಲ್ಲಿ ಸುದೀಪ್ ಬಿಜೆಪಿ ಸೇರ್ಪಡೆಯ ಸುದ್ದಿಗೆ ಪ್ರತಿಕ್ರಿಯಿಸಿರುವ ಬಹುಭಾಷಾ ನಟ ಪ್ರಕಾಶ್ ರಾಜ್, ನಮ್ಮ ಕಿಚ್ಚ ಮಾರಿಕೊಳ್ಳುವವರಲ್ಲ ಎಂದಿದ್ದಾರೆ.
ರಾಷ್ಟ್ರೀಯ ಮಾಧ್ಯಮವೊಂದರ ವರದಿಯನ್ನು ಉಲ್ಲೇಖಿಸಿ ಟ್ವೀಟ್ ಮಾಡಿರುವ ಪ್ರಕಾಶ್ ರಾಜ್, ಕರ್ನಾಟಕದಲ್ಲಿ ಸೋಲುವ ಭಯದಲ್ಲಿರುವ ಭ್ರಷ್ಟ ಬಿಜೆಪಿ ಹರಡುತ್ತಿರುವ ಸುಳ್ಳು ಸುದ್ದಿ ಎಂದು ನಾನು ನಂಬುತ್ತೇನೆ. ನಮ್ಮ ಕಿಚ್ಚ ಮಾರಿಕೊಳ್ಳುವವರಲ್ಲ. ಬಿಜೆಪಿಗರು ಹತಾಶೆಯಿಂದ ಈ ರೀತಿಯ ಸುದ್ದಿಗಳನ್ನು ಹಬ್ಬಿಸುತ್ತಿದ್ದಾರೆ” ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಸುದೀಪ್ ರಾಜಕೀಯ ಪ್ರವೇಶದ ಸುದ್ದಿ ಕಳೆದ ಕೆಲ ತಿಂಗಳಿನಿಂದ ಚರ್ಚೆಯಲ್ಲಿದೆ. ಆರಂಭದಲ್ಲಿ ಸುದೀಪ್ ಬಿಜೆಪಿ ಸೇರಲಿದ್ದಾರೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ನಟಿ, ಮಾಜಿ ಸಂಸದೆ ರಮ್ಯ ಸೇರಿದಂತೆ ಹಲವರು ಅವರ ಮನವೊಲಿಸಲು ಯತ್ನಿಸಿದ್ದಾರೆ ಎಂಬ ಸುದ್ದಿ ಹರಡಿತ್ತು. ಇತ್ತೀಚೆಗೆ ಸುದೀಪ್ ಕೂಡ ಕಾಂಗ್ರೆಸ್ ನಾಯಕರು ತಮ್ಮನ್ನು ಸಂಪರ್ಕಿಸಿದ್ದು ನಿಜ ಎಂದು ಒಪ್ಪಿಕೊಂಡಿದ್ದರು.
ಈ ಸುದ್ದಿ ಓದಿದ್ದೀರಾ? ನಟ ಸುದೀಪ್ಗೆ ಅಪರಿಚಿತರಿಂದ ಬೆದರಿಕೆ
ಇದೀಗ ಸುದೀಪ್ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಅಥವಾ ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಪರ ತಾರಾ ಪ್ರಚಾರಕರಾಗಿ ಕಾರ್ಯ ನಿರ್ವಹಿಸಲಿದ್ದಾರೆ ಎನ್ನಲಾಗುತ್ತಿದೆ. ಈ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬುಧವಾರ ಮಧ್ಯಾಹ್ನ ಬೆಂಗಳೂರಿನ ಖಾಸಗಿ ಹೋಟೆಲ್ಗಳಲ್ಲಿ ಎರಡು ಪ್ರತ್ಯೇಕ ಸುದ್ದಿಗೋಷ್ಠಿಗಳನ್ನು ನಿಗದಿ ಪಡಿಸಿದ್ದಾರೆ. ಮತ್ತೊಬ್ಬ ಸ್ಟಾರ್ ನಟ ದರ್ಶನ್ ಕೂಡ ಬಿಜೆಪಿ ಪರ ಪ್ರಚಾರಕ್ಕಿಳಿಯುವ ಸಾಧ್ಯತೆ ಇದೆ ಎಂಬ ಮಾತುಗಳು ಕೇಳಿ ಬರುತ್ತಿವೆ.