ಹೃದಯಾಘಾತ, ಕ್ಯಾನ್ಸರ್, ಸ್ಟ್ರೋಕ್ ಸೇರಿದಂತೆ ಇತರೆ ಕಾರಣಗಳಿಂದ ಮೃತಪಟ್ಟ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್ಟಿಸಿ)ದ 16 ನೌಕರರ ಕುಟುಂಬದವರಿಗೆ ಕುಟುಂಬ ಕಲ್ಯಾಣ ಯೋಜನೆಯ ಪರಿಹಾರ ಹಣ ₹10 ಲಕ್ಷ ಹಣವನ್ನು ಮೊದಲ ಬಾರಿಗೆ ನೀಡಲಾಗಿದೆ.
ನೌಕರರ ಅವಲಂಬಿತರಿಗೆ ಅಪಘಾತ ಪರಿಹಾರ ವಿಮೆ ₹1 ಕೋಟಿ ಹಾಗೂ ಹೃದಯಾಘಾತ, ಕ್ಯಾನ್ಸರ್, ಸ್ಟ್ರೋಕ್ ಸೇರಿದಂತೆ ಇತರೆ ಕಾರಣಗಳಿಂದ ಮೃತಪಟ್ಟ 16 ನೌಕರರ ಕುಟುಂಬದವರಿಗೆ ಮೊದಲ ಬಾರಿಗೆ ಕುಟುಂಬ ಕಲ್ಯಾಣ ಯೋಜನೆಯ ಪರಿಹಾರ ಹಣ ₹10 ಲಕ್ಷ ಹಣ ನೀಡಲಾಗಿದೆ.
₹1 ಕೋಟಿ ಅಪಘಾತ ವಿಮೆ
ನಿಗಮವು ತನ್ನ ಸಿಬ್ಬಂದಿ ಅವಲಂಬಿತರ ಜೀವನಕ್ಕೆ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಕರ್ತವ್ಯದಲ್ಲಿರುವಾಗ ಅಥವಾ ಕರ್ತವ್ಯದಲ್ಲಿಲ್ಲದ ಸಂದರ್ಭದಲ್ಲಿ ಅಪಘಾತದಿಂದ ಮೃತಪಟ್ಟ ಅಥವಾ ಅಂಗನ್ಯೂನತೆಗೆ ಒಳಗಾದಲ್ಲಿ ₹1 ಕೋಟಿ ಅಪಘಾತ ವಿಮಾ ಪರಿಹಾರ ಒದಗಿಸುವ ಅಪಘಾತ ವಿಮಾ ಯೋಜನೆಯನ್ನು ಜಾರಿಗೆ ತಂದಿದೆ. ಯೋಜನೆ ಜಾರಿ ನಂತರದಲ್ಲಿ 17 ಜನ ನೌಕರರು ವೈಯಕ್ತಿಕ ಅಥವಾ ಕರ್ತವ್ಯನಿರತ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ಇದುವರೆಗೂ 12 ಜನ ನೌಕರರ ಕುಟುಂಬದವರಿಗೆ ತಲಾ ₹1 ಕೋಟಿ ಅಪಘಾತ ವಿಮಾ ಮೊತ್ತವನ್ನು ಈಗಾಗಲೇ ವಿತರಣೆ ಮಾಡಲಾಗಿದೆ ಎಂದು ನಿಗಮ ತಿಳಿಸಿದೆ.
“ಹಾಸನ ವಿಭಾಗದ ಅರಕಲಗೂಡು ಘಟಕದ ಚಾಲಕ-ಕಂ-ನಿರ್ವಾಹಕ ರಾಜೇಶ್ ಡಿ.ಸಿ ಅವರು 2023ರ ಜುಲೈ 29ರಂದು ಮೃತಪಟ್ಟಿದ್ದಾರೆ. ಮೃತರ ಅವಲಂಬಿತರಿಗೆ ₹1 ಕೋಟಿ ಅಪಘಾತ ಪರಿಹಾರ ವಿಮಾ ಜತೆಗೆ, ಉಪಧನ, ಭವಿಷ್ಯ ನಿಧಿ, ನೌಕರರ ಕುಟುಂಬ ಕಲ್ಯಾಣ ಯೋಜನೆ, ಡಿಆರ್ಬಿಎಫ್ ಹಾಗೂ ಗಂಪು ವಿಮಾ ಯೋಜನೆಯಿಂದ ₹14,19,980 ಪರಿಹಾರ ನೀಡಲಾಯಿತು” ಎಂದು ಹೇಳಿದೆ.
“ಆದರೆ, ಹೃದಯಾಘಾತ, ಕ್ಯಾನ್ಸರ್, ಸ್ಟ್ರೋಕ್ ಮತ್ತಿತರ ಕಾರಣಗಳಿಂದ ಸಾವನ್ನಪ್ಪುವ ನೌಕರರ ಸಂಖ್ಯೆಯು ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ದಾಖಲಾಗುತ್ತಿದೆ. ಈ ವಿಷಯವನ್ನು ಮನಗಂಡು, ಈ ಕಾರಣದಿಂದ ಮೃತರಾಗುವ ಕುಟುಂಬದ ಅವಲಂಬಿತರು ಅನುಭವಿಸುವ ಕಷ್ಟಗಳನ್ನು ಗಮನಿಸಿ, ಅವರಿಗೆ ನೆರವಾಗಲು ಹೆಚ್ಚಿನ ಮೊತ್ತದ ಪರಿಹಾರವನ್ನು ನೀಡುವ ಸದುದ್ದೇಶದಿಂದ ಹಾಗೂ ನಾನಾ ಕಾರ್ಮಿಕ ಸಂಘಟನೆಗಳಿಂದ ಬೇಡಿಕೆ ಬಂದ ಹಿನ್ನಲೆ ನೌಕರರ ಕುಟುಂಬ ಕಲ್ಯಾಣ ಯೋಜನೆಯಡಿ ನೀಡಲಾಗುತ್ತಿದ್ದ ಪರಿಹಾರ ಮೊತ್ತವಾದ ₹3 ಲಕ್ಷವನ್ನು 2023ರ ನವೆಂಬರ್ 1ರಿಂದ ಜಾರಿಗೆ ಬರುವಂತೆ ₹10 ಲಕ್ಷಗಳಿಗೆ ಪರಿಹಾರ ಮೊತ್ತವನ್ನು ಹೆಚ್ಚಿಸಲಾಗಿದೆ. ಮುಂದುವರೆದ ಮರಣ ಪ್ರಕರಣಗಳಿಗೆ ಅನ್ವಯವಾಗುವಂತೆ ಜಾರಿಗೆ ತರಲಾಗಿದೆ” ಎಂದು ತಿಳಿಸಿದೆ.
“ನಿಗಮದ ಕುಟುಂಬ ಕಲ್ಯಾಣ ಪರಿಹಾರ ಯೋಜನೆ ಅಡಿಯಲ್ಲಿ ಕಳೆದ ನವೆಂಬರ್ 2023 ಮತ್ತು ಡಿಸೆಂಬರ್ 2023 ರ ತಿಂಗಳಲ್ಲಿ ಮರಣ ಹೊಂದಿದ 16 ಸಿಬ್ಬಂದಿಗಳ ಅರ್ಹ ಪ್ರಕರಣಗಳಲ್ಲಿ ಕುಟುಂಬದ ಸದಸ್ಯರಿಗೆ ತಲಾ ₹10 ಲಕ್ಷ ಪರಿಹಾರದ ಚೆಕ್ ಅನ್ನು ವಿತರಿಸಲಾಯಿತು” ಎಂದು ಹೇಳಿದೆ.
ಈ ಸುದ್ದಿ ಓದಿದ್ದೀರಾ? ಅಯೋಧ್ಯೆಗೆ ಮೆಮು ರೈಲು ರವಾನೆ; ಕೋಲಾರ ಜನರ ಪರದಾಟ
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಎಸ್ಆರ್. ಶ್ರೀನಿವಾಸ್ (ವಾಸು) ಅವರು ಕೇಂದ್ರ ಕಚೇರಿಯಲ್ಲಿ ನಿಗಮದ ಸೇವೆಯಲ್ಲಿರುವಾಗ ಅಪಘಾತದಲ್ಲಿ ಮೃತಪಟ್ಟ ಸಿಬ್ಬಂದಿಯ ಅವಲಂಬಿತರಿಗೆ ₹1 ಕೋಟಿ ಪರಿಹಾರ ಮೊತ್ತದ ಚೆಕ್ ಹಾಗೂ ಇತರೆ ಕಾರಣಗಳಿಂದ ಮೃತಪಟ್ಟಿದ್ದ 16 ಸಿಬ್ಬಂದಿ ಅವಲಂಬಿತರಿಗೆ ಕುಟುಂಬ ಕಲ್ಯಾಣ ಯೋಜನೆಯಡಿ ತಲಾ ₹10 ಲಕ್ಷ ಹಾಗೂ ಅವರಿಗೆ ನಿಗಮದಿಂದ ಪಾವತಿಸಬೇಕಾದ ಭವಿಷ್ಯನಿಧಿ, ಉಪಧನ ಚೆಕ್ಕನ್ನು ವಿತರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ನಿಗಮದ ಅಧ್ಯಕ್ಷ ಎಸ್ಆರ್. ಶ್ರೀನಿವಾಸ್, “ಕೆಎಸ್ಆರ್ಟಿಸಿಯಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿ ಅತೀ ಶ್ರಮಜೀವಿಗಳಾಗಿದ್ದು, ನಿಗಮವು ಅವರ ಕಲ್ಯಾಣಕ್ಕಾಗಿ ಹಲವಾರು ಯೋಜನೆಗಳನ್ನು ರೂಪಿಸಿರುವುದನ್ನು ತಿಳಿದು ಬಹಳ ಸಂತೋಷವಾಯಿತು” ಎಂದರು.
“ತಮಗೆ ದೊರೆತಿರುವ ಪರಿಹಾರ ಹಣವನ್ನು ಯಾರಿಗೂ ಕೊಡದೇ ಮುಂದಿನ ಜೀವನ ನಿರ್ವಹಣೆಗಾಗಿ ಸೂಕ್ತವಾಗಿ ವಿನಿಯೋಗಿಸಿ ಕಾಪಾಡಿಕೊಳ್ಳಿ” ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ವ್ಯವಸ್ಥಾಪಕ ನಿರ್ದೇಶಕ ವಿ.ಅನ್ಬುಕುಮಾರ್, ನಿರ್ದೇಶಕಿ (ಸಿಬ್ಬಂದಿ ಮಾತ್ತು ಜಾಗೃತ) ಡಾ.ನಂದಿನಿದೇವಿ, ಕಾರ್ಮಿಕ ಸಂಘಟನೆಗಳ ಮುಖಂಡರು, ಅಧಿಕಾರಿಗಳು ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.