ಹೊಸ ರಾಷ್ಟ್ರೀಯ ಶಿಕ್ಷಣ ನೀತಿ (ಎನ್ಇಪಿ) ಜಾರಿಗೊಳಿಸುವ ಮೂಲಕ ಹಿಂದಿ ಭಾಷೆ ಹೇರುವ ಉದ್ದೇಶವಿದೆ. ಅಲ್ಲದೆ, ಎನ್ಇಪಿಯಿಂದ ಕನ್ನಡಕ್ಕೂ ಧಕ್ಕೆಯಾಗುತ್ತದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಮಂಡ್ಯದಲ್ಲಿ ಬಿಸಿಯೂಟದ ಜೊತೆಗೆ ಮೊಟ್ಟೆ ನೀಡುವ ಯೋಜನೆಗೆ ಚಾಲನೆ ನೀಡಿ ಅವರು ಮಾತನಾಡಿದರು. “ಎನ್ಇಪಿ ಮೂಲಕ ಕೇಂದ್ರ ಸರ್ಕಾರ ಎಲ್ಲ ರಾಜ್ಯಗಳಲ್ಲಿ ಹಿಂದಿ ಹೇರಿಕೆ ಮಾಡಲಾಗುತ್ತದೆ. ಅದರಿಂದ ರಾಜ್ಯದಲ್ಲಿ ಕನ್ನಡ ಭಾಷೆಯನ್ನೇ ಮರೆತುಬಿಡುವ ಪರಿಸ್ಥಿತಿ ಎದುರಾಗಬಹುದು” ಎಂದು ಅವರು ಹೇಳಿದ್ದಾರೆ.
“ನಾವು ಒಕ್ಕೂಟ ವ್ಯವಸ್ಥೆಯಲ್ಲಿದ್ದೇವೆ. ಎಲ್ಲ ರಾಜ್ಯಗಳ ಸಂಸ್ಕೃತಿ, ಭಾಷೆ ಹಾಗೂ ಶಿಕ್ಷಣಕ್ಕೆ ಗೌರವ ನೀಡಬೇಕು. ಆದರೆ, ಕೇಂದ್ರ ಸರ್ಕಾರ ಹಿಂದಿ ಹೇರಿಕೆ ಮಾಡಲು ಮುಂದಾಗಿದೆ. ನಾವು ಎನ್ಇಪಿಯನ್ನು ಜಾರಿಗೊಳಿಸುವುದಿಲ್ಲವೆಂದು ಹೇಳಿದ್ದೆವು. ಅದಕ್ಕೆ ನಾವು ಬದ್ಧರಾಗಿದ್ದೇವೆ” ಎಂದು ಹೇಳಿದ್ದಾರೆ.