- ಪತ್ರ ಅಸಲಿ ಎಂದ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ
- ‘ಬಿಬಿಎಂಪಿ, ಬಿಡಿಎನಲ್ಲಿ ಸತ್ಯಾಸತ್ಯತೆ ತಿಳಿಯಲು ತನಿಖೆ’
ಮಂಡ್ಯ ಜಿಲ್ಲೆ ಕೃಷಿ ಅಧಿಕಾರಿಗಳು ಕೃಷಿ ಸಚಿವರ ವಿರುದ್ಧ ಬರೆದಿದ್ದಾರೆನ್ನಲಾದ ಪತ್ರದ ಕುರಿತು ಸಿಐಡಿ ತನಿಖೆ ನಡೆಸಲು ಸರ್ಕಾರ ತೀರ್ಮಾನಿಿದೆ. ಗೃಹ ಸಚಿವರ ಜತೆ ಚರ್ಚೆ ನಡೆಸಿದ ಬಳಿಕ ಮುಖ್ಯಮಂತ್ರಿಗಳು ಪ್ರಕರಣವನ್ನು ಸಿಐಡಿಗೆ ತನಿಖೆಗೆ ಒಪ್ಪಿಸಲು ಸೂಚಿಸಿದ್ದಾರೆ.
ಮಾಜಿ ಮುಖ್ಯಮಂತ್ರಿ ದಿ.ಎಸ್.ನಿಜಲಿಂಗಪ್ಪ ಅವರ ಪುಣ್ಯತಿಥಿಯ ಅಂಗವಾಗಿ ಮಂಗಳವಾರ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿ, ಕೃಷಿ ಸಚಿವ ಚಲುವರಾಯಸ್ವಾಮಿ ಅವರ ವಿರುದ್ಧ ಬರೆದಿರುವ ಪತ್ರದ ಬಗ್ಗೆ ಸಿಐಡಿ ತನಿಖೆ ಕೈಗೊಳ್ಳಲು ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಪತ್ರ ಅಸಲಿ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಟ್ವೀಟ್ ಮಾಡಿದ್ದಾರೆ ಎಂಬ ಬಗ್ಗೆ ಉತ್ತರಿಸಿ “ರಾಮನಗರದ ಕೃಷಿ ಇಲಾಖೆ ಜಂಟಿ ನಿರ್ದೇಶಕ ಅಶೋಕ್ ಕುಮಾರ್ ಅವರು ಪತ್ರವನ್ನು ಅಧಿಕಾರಿಗಳು ಬರೆದಿಲ್ಲ ಎಂದು ದೂರು ನೀಡಿದ್ದಾರೆ. ಸಿಐಡಿ ಪೊಲೀಸರು ತನಿಖೆ ಮಾಡಿ ಸತ್ಯ ಬಯಲಿಗೆಳೆಯಲು ಸೂಚಿಸಲಾಗಿದೆ” ಎಂದರು.
ಸತ್ಯಾಸತ್ಯತೆ ತಿಳಿಯಲು ತನಿಖೆ
ಬಿಬಿಎಂಪಿ ಗುತ್ತಿಗೆದಾರರು ಅನುದಾನ ಬಿಡುಗಡೆ ಮಾಡುತ್ತಿಲ್ಲ ಎಂದು ಕೆಲಸ ನಿಲ್ಲಿಸಿ ರಾಜ್ಯಪಾಲರನ್ನು ಭೇಟಿ ಮಾಡುತ್ತಿದ್ದಾರೆ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, “ಕೆಲಸ ನಿಲ್ಲಿಸಿಲ್ಲ. ತನಿಖೆಯಾಗಬೇಕೆಂದು ರಾಜ್ಯಪಾಲರನ್ನು ಭೇಟಿ ಮಾಡುತ್ತಿದ್ದಾರೆ. ಬಿಬಿಎಂಪಿ, ಬಿಡಿಎನಲ್ಲಿ ಕೆಲಸಗಳಾಗಿರುವ ಬಗ್ಗೆ ಸತ್ಯಾಸತ್ಯತೆ ತಿಳಿಯಲು ತನಿಖೆ ಮಾಡಿಸಲಾಗುತ್ತಿದೆ. ಈ ಬಗ್ಗೆ ಸಮಿತಿ ರಚನೆ ಮಾಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ” ಎಂದರು.
ಈ ಸುದ್ದಿ ಓದಿದ್ದೀರಾ? ಷಡ್ಯಂತ್ರದ ಹಿಂದಿರುವವರ ವಿರುದ್ಧ ಕಾನೂನು ಕ್ರಮ : ಎನ್ ಚಲುವರಾಯಸ್ವಾಮಿ ಎಚ್ಚರಿಕೆ
ಉಡುಪಿ ಪ್ರಕರಣ: ಉನ್ನತ ತನಿಖೆಗಾಗಿ ಸಿಐಡಿಗೆ
ಉಡುಪಿ ವಿಡಿಯೋ ಪ್ರಕರಣವನ್ನು ಸಿಐಡಿಗೆ ವಹಿಸಿದ್ದು ನಿನ್ನೆ ಆದೇಶವಾಗಿದೆ. ಡಿವೈಎಸ್ಪಿ ಮಟ್ಟದ ಅಧಿಕಾರಿಗೆ ತನಿಖೆ ಮಾಡಲು ಸೂಚಿಸಲಾಗಿತ್ತು. ಆದರೆ ಇನ್ನೂ ಉನ್ನತ ಮಟ್ಟದ ತನಿಖೆ ಮಾಡಬೇಕೆಂದು ಸಿಐಡಿಗೆ ವಹಿಸಲಾಗಿದೆ” ಎಂದು ಹೇಳಿದರು.
ಶಾಸಕ ಯಶ್ ಪಾಲ್ ಸುವರ್ಣ ಅವರು ಪ್ರಕರಣವನ್ನು ಮುಚ್ಚಿಹಾಕಲು ಪ್ರಯತ್ನ ಮಾಡಿದ್ದಾರೆ ಎಂದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, “ಸಿಐಡಿಗೆ ಕೊಟ್ಟರೂ ಬೇಡ ಎನ್ನುತ್ತಾರೆ. ಅವರ ಕಾಲದಲ್ಲಿ ಸಿಐಡಿಗೆ ಕೊಟ್ಟಿದ್ದ ಪ್ರಕರಣಗಳು ಮುಚ್ಚಿಹೋಗಿವೆಯೇ” ಎಂದು ಪ್ರಶ್ನಿಸಿದರು.