- ಪ್ರವೀಣ್ ನೆಟ್ಟಾರು ಪತ್ನಿಗೆ ನೀಡಿದ್ದ ಹುದ್ದೆ ರದ್ದು ಮಾಡಿದ ಸರ್ಕಾರ
- ಸಿದ್ದರಾಮಯ್ಯ ಸರ್ಕಾರ ಪಿಎಫ್ಐ ಕೈಗೊಂಬೆಯಂತೆ ಕುಣಿಯುತ್ತಿದೆ
ರಾಜ್ಯದಲ್ಲಿ ಆಡಳಿತಕ್ಕೆ ಬಂದಿರುವ ಕಾಂಗ್ರೆಸ್ ನೇತೃತ್ವದ ಸರ್ಕಾರ ತನ್ನ ದ್ವೇಷದ ರಾಜಕೀಯವನ್ನು ಮುಂದುವರಿಸಿರುವುದು ಖಂಡನೀಯ ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.
ದುಷ್ಕರ್ಮಿಗಳಿಂದ ಹತ್ಯೆಯಾಗಿದ್ದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಪತ್ನಿ ನೂತನ ಕುಮಾರಿ ಅವರಿಗೆ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರವು ಮುಖ್ಯಮಂತ್ರಿ ಸಚಿವಾಲಯದಲ್ಲಿ ನೀಡಿದ್ದ ಗುತ್ತಿಗೆ ಆಧಾರಿತ ಉದ್ಯೋಗವನ್ನು ಹೊಸ ಸರ್ಕಾರ ರದ್ದು ಮಾಡಿದೆ.
ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ, “ಕಾಂಗ್ರೆಸ್ ಪಕ್ಷವೇ ಸಾಕಿ ಬೆಳೆಸಿದ ಪಿಎಫ್ಐ ಎಂಬ ಭಯೋತ್ಪಾದಕ ಸಂಘಟನೆಯ ಕೋಮು ದ್ವೇಷಕ್ಕೆ ಒಳಪಟ್ಟು, ಪಿಎಫ್ಐ ಗೂಂಡಾಗಳಿಂದ ಹತ್ಯೆಗೊಳಗಾದ ಪ್ರವೀಣ್ ನೆಟ್ಟಾರು ಅವರ ಧರ್ಮಪತ್ನಿಗೆ ಜೀವನ ನಿರ್ವಹಣೆಗಾಗಿ ಅನುಕಂಪದ ಆಧಾರದಲ್ಲಿ ನಮ್ಮ ಸರ್ಕಾರ ಮಂಗಳೂರಿನ ಡಿ.ಸಿ. ಕಚೇರಿಯಲ್ಲಿ ಉದ್ಯೋಗ ಕಲ್ಪಿಸಿತ್ತು” ಎಂದು ತಿಳಿಸಿದೆ.
“ಕಾಂಗ್ರೆಸ್ ನೇತೃತ್ವದ ಸರ್ಕಾರ ತನ್ನ ದ್ವೇಷದ ರಾಜಕೀಯವನ್ನು ಮುಂದುವರಿಸಿರುವುದು ಖಂಡನೀಯ. ಕೂಡಲೇ ಸರ್ಕಾರ ಉದ್ಯೋಗದಿಂದ ವಜಾಮಾಡುವ ಅಮಾನವೀಯ ಆದೇಶವನ್ನು ಹಿಂಪಡೆಯಬೇಕು” ಎಂದು ಆಗ್ರಹಿಸಿದೆ.
“ಪಿಎಫ್ಐ ಕೈಗೊಂಬೆಯಂತೆ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ಕುಣಿಯುತ್ತಿರುವುದು ರಾಜ್ಯದ ದುರಂತ” ಎಂದು ಬಿಜೆಪಿ ಅಸಮಧಾನ ವ್ಯಕ್ತಪಡಿಸಿದೆ.
ಈ ಸುದ್ದಿ ಓದಿದ್ದೀರಾ? ಎಂಟು ಜಿಲ್ಲೆಗಳಿಗೆ ಸಿಗದ ಸಚಿವ ಸ್ಥಾನದ ಪ್ರಾತಿನಿಧ್ಯ