ಸಹಾಯಕ ಕಾರ್ಯ ನಿರ್ವಾಹಕ ಎಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಕಿರಿಯ ಎಂಜಿನಿಯರ್ಗಳಿಗೆ ಬಡ್ತಿ ನೀಡಿ 2011ರಲ್ಲಿ ಅಂದಿನ ಬಿಜೆಪಿ ಸರ್ಕಾರ ಅಧಿಸೂಚನೆ ಹೊರಡಿಸಿತ್ತು. ಆ ಅಧಿಸೂಚನೆಯನ್ನು ಬರೋಬ್ಬರಿ 12 ವರ್ಷಗಳ ಬಳಿಕ ಹೈಕೋರ್ಟ್ ರದ್ದುಗೊಳಿಸಿದೆ.
ಕಿರಿಯ ಎಂಜಿನಿಯರ್ಗಳಿಗೆ ಬಡ್ತಿ ನೀಡುವ ಮೂಲಕ ಸಹಾಯಕ ಕಾರ್ಯ ನಿರ್ವಾಹಕ ಎಂಜಿನಿಯರ್ ಹುದ್ದೆಗಳಲ್ಲಿ ಶೇ.25ರಷ್ಟು ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಮುಂದಾಗಿತ್ತು. ಅದಕ್ಕಾಗಿ, ಕರ್ನಾಟಕ ಮುನ್ಸಿಪಲ್ ಕಾರ್ಪೋರೇಷನ್ (ಅಧಿಕಾರಿಗಳ ಮತ್ತು ಸಿಬ್ಬಂದಿ ಸಾಮಾನ್ಯ ನೇಮಕಾತಿ) ಅಧಿನಿಯಮಗಳು-2011ರ ಷೆಡ್ಯೂಲ್-3ಕ್ಕೆ ಮಾರ್ಪಾಡು ಮಾಡಿ 2011ರ ಏಪ್ರಿಲ್ 11ರಂದು ಅಧಿಸೂಚನೆಯನ್ನೂ ಹೊರಡಿಸಿತ್ತು. ಆ ಅಧಿಸೂಚನೆ ರದ್ದುಪಡಿಸುವಂತೆ ಕೋರಿ ಎಂ.ಆರ್ ರಂಗರಾಮು ಸೇರಿದಂತೆ ಏಳು ಮಂದಿ ಸಹಾಯಕ ಎಂಜಿನಿಯರ್ಗಳು ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಿದ್ದರು.
ಅರ್ಜಿಯನ್ನು ನ್ಯಾಯಮೂರ್ತಿ ಇ.ಎಸ್ ಇಂದಿರೇಶ್ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸುತ್ತಿತ್ತು. ಇದೀಗ, 12 ವರ್ಷಗಳ ಬಳಿಕ ಅಧಿಸೂಚನೆಯನ್ನು ರದ್ದುಗೊಳಿಸಿದೆ. ಸರ್ಕಾರ ಹೊರಡಿಸಿದ್ದ ಅಧಿಸೂಚನೆ ಅಸಾಂವಿಧಾನಿಕ ಹಾಗೂ ಸಂವಿಧಾನದ 14 (ಸಮಾನತೆ) ಮತ್ತು 16ನೇ (ಸಮಾನ ಅವಕಾಶ) ವಿಧಿಗಳ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಹೇಳಿದೆ.