ಶಿವಮೂರ್ತಿ ಮುರುಘಾ ವಿರುದ್ಧದ 2ನೇ ಪೋಕ್ಸೋ ಪ್ರಕರಣದಲ್ಲಿ ಮುರುಘಾ ಅವರನ್ನು ಸೋಮವಾರ ಬಂಧಿಸಲಾಗಿದೆ. ಆದರೆ, ಅವರ ಬಂಧನಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಶಿವಮೂರ್ತಿ ಮುರುಘಾ ಅವರನ್ನು ಬಿಡುಗಡೆ ಮಾಡುವಂತೆ ಆದೇಶಿಸಿದೆ.
ಶಿವಮೂರ್ತಿ ಮುರುಘಾ ಅವರ ಬಂಧನವನ್ನು ಪ್ರಶ್ನಿಸಿ ಅವರ ವಕೀಲ ಉಮೇಶ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಅವರ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ರವರಿದ್ದ ಪೀಠ, “ಮುರುಘಾ ಅವರ ವಿರುದ್ಧ ಜಾಮೀನು ರಹಿತ ಬಂಧನದ ವಾರೆಂಟ್ ನೀಡಿರುವುದು ಹೈಕೋರ್ಟ್ ಆದೇಶದ ಉಲ್ಲಂಘನೆಯಾಗಿದೆ. ಅವರನ್ನು ಬಿಡುಗಡೆಗೊಳಿಸಬೇಕು” ಎಂದು ಚಿತ್ರದುರ್ಗ ಜಿಲ್ಲಾ ಕಾರಾಗೃಹಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.
“ಮುಂದಿನ ಆದೇಶದವರೆಗೂ 2ನೇ ಪೋಕ್ಸೋ ಪ್ರಕರಣದ ವಿಚಾರಣೆ ಮುಂದೂಡಬೇಕು” ಎಂದು ಚಿತ್ರದುರ್ಗ ಜಿಲ್ಲಾ ನ್ಯಾಯಾಲಯಕ್ಕೆ ಸೂಚನೆ ನೀಡಿದೆ.
ಚಿತ್ರದುರ್ಗಕ್ಕೆ ಪ್ರವೇಶಿಸದಂತೆ ಹೈಕೋರ್ಟ್ ಆದೇಶವಿದೆ. ಆದರೂ, ಅರವನ್ನು ಬಂಧಿಸಿ ಚಿತ್ರದುರ್ಗಕ್ಕೆ ಕರೆತಂದಿರುವುದು ಆದೇಶ ಉಲ್ಲಂಘನೆಯಾಗಿದೆ. ಹೈಕೋರ್ಟ್ ಆದೇಶದಂತೆ 2ನೇ ಪೋಕ್ಸೋ ಪ್ರಕರಣದ ವಿಚಾರಣೆಯನ್ನು ಮುಂದೂಡಬೇಕಿತ್ತು. ಆದರೆ, ಜಾಮೀನು ರಹಿತ ವಾರಂಟ್ ಹೊರಡಿಸಲಾಗಿದೆ. ಕೇಸ್ ಬೇರೆಯದಾದರೂ ನಿರ್ಬಂಧ ಬದಲಾಗುವುದಿಲ್ಲ” ಎಂದು ಹೈಕೋರ್ಟ್ ಹೇಳಿದೆ.
“ಶಿವಮೂರ್ತಿ ಮುರುಘಾ ಅವರನ್ನು ಬಿಡುಗಡೆ ಮಾಡುವಂತೆ ಚಿತ್ರದುರ್ಗ ಕಾರಾಗೃಹಕ್ಕೆ ಹೈಕೋರ್ಟ್ ಆದೇಶಿಸಿದೆ. ಅದೇಶವನ್ನು ಪರಿಶೀಲಿಸಿ ಬಿಡುಗಡೆ ಮಾಡುವ ಸಾಧ್ಯತೆ ಇದೆ” ಎಂದು ಶಿವಮೂರ್ತಿ ಮುರುಘಾ ಅವರ ವಕೀಲರು ಹೇಳಿದ್ದಾರೆ.