ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಅಶ್ವಥ್ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರು ಸರಿಯಾದ ಸಮಯಕ್ಕೆ ಕರ್ತವ್ಯವಕ್ಕೆ ಹಾಜರಾಗುತ್ತಿಲ್ಲ. ಕರ್ತವ್ಯ ಲೋಪವೆಸಗಿರುವ ಅವರನ್ನು ಬೇರೆಡೆಗೆ ವರ್ಗಾವಣೆ ಮಾಡಬೇಕೆಂದು ಸಂಯುಕ್ತ ಜನತಾದಳದ ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಎಸ್ ಗೌಡ ಒತ್ತಾಯಿಸಿದ್ದಾರೆ.
ವೈದ್ಯರ ವರ್ಗಾವಣೆ ಮತ್ತು ಆಸ್ಪತ್ರೆಯಲ್ಲಿ ವ್ಯವಸ್ಥಿತ ಕಾರ್ಯನಿರ್ವಹಣೆಗೆ ಆಗ್ರಹಿಸಿ ಫೆ.19ರಿಂದ ನ್ಯಾಯ ದೊರಕುವವರೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಚೇರಿ ಎದುರು ದರಣಿ ಸತ್ಯಾಗ್ರಹ ನಡೆಸುವುದಾಗಿ ಅವರು ಹೇಳಿದ್ದಾರೆ.
ಅಶ್ವಥ್ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರು ಮತ್ತು ಸಿಬ್ಬಂದಿಗಳು ಕರ್ತವ್ಯಕ್ಕೆ ಸರಿಯಾದ ಸಮಯಕ್ಕೆ ಹಾಜರಾಗದೆ ಇರುವುದನ್ನು ಖಂಡಿಸಿ 2022ರ ಸೆಪ್ಟೆಂಬರ್ನಲ್ಲಿ ಪ್ರತಿಭಟನೆ ನಡೆಸಿದ್ದೆವು. ತಾಲೂಕು ಆರೋಗ್ಯ ಅಧಿಕಾರಿಗೆ ವಿಡಿಯೋ ಸಮೇತ ಸಾಕ್ಷ್ಯಗಳನ್ನು ಒದಗಿಸಿದ್ದೆವು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗೂ ಹಕ್ಕೊತ್ತಾಯ ಸಲ್ಲಿಸಿದ್ದೆವು. ಆದರೆ, ಈವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದ್ದಾರೆ.
ಆಸ್ಪತ್ರೆಯ ವೈದ್ಯೆ ಗಾಯತ್ರಿ ಅವರು ಸಮಯಕ್ಕೆ ಸರಿಯಾಗಿ ಹಾಜರಾಗದೇ ಇರುವ ವಿಚಾರವನ್ನು ಆರೋಗ್ಯ ಅಧಿಕಾರಿ ಸಮರ್ಥಿಸಿಕೊಂಡು ತಪ್ಪು ವರದಿಯನ್ನು ತಮ್ಮ ಮೇಲಾಧಿಕಾರಿಗೆ ನೀಡಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.