- ಶಿರಾ ಕ್ಷೇತ್ರಕ್ಕೆ ವಿಶೇಷ ಅನುದಾನ ನೀಡುವಂತೆ ಮನವಿ
- ‘ರಸ್ತೆಗಳ ಅಭಿವೃದ್ಧಿಗೆ ಕನಿಷ್ಠ 200 ಕೋಟಿ ರೂ. ನೀಡಿ’
ಶಿರಾ ವಿಧಾನಸಭಾ ಕ್ಷೇತ್ರದಲ್ಲಿ ಗ್ರಾಮೀಣ ರಸ್ತೆಗಳ ಅಭಿವೃದ್ಧಿಗಾಗಿ ಮತ್ತು ಕುಡಿಯುವ ನೀರು ಯೋಜನೆಗೆ ಹಾಗೂ ನರೇಗಾ ಯೋಜನೆಯಡಿ ಹೆಚ್ಚು ಕೆಲಸ ಮಾಡಲು ವಿಶೇಷ ಅನುದಾನ ನೀಡುವಂತೆ ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ ಬಿ ಜಯಚಂದ್ರ ಅವರು ಕೇಂದ್ರ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಗಿರಿರಾಜ್ ಸಿಂಗ್ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದರು.
ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಶಿರಾ ವಿಧಾನ ಸಭಾ ಕ್ಷೇತ್ರವನ್ನು ಬರಪೀಡಿತ ಪಟ್ಟಿಗೆ ಸೇರ್ಪಡೆ ಮಾಡಿವೆ.
ಬಹಳ ಹಿಂದುಳಿದ ವಿಧಾನಸಭಾ ಕ್ಷೇತ್ರವಾಗಿರುವ ಇಲ್ಲಿ ವಾರ್ಷಿಕವಾಗಿ ಸರಾಸರಿ 419 ರಿಂದ 723 ಮಿಲಿಮೀಟರ್ ಮಳೆ ಆಗುತ್ತಿದೆ. ಹೀಗಾಗಿ ಈ ವಿಧಾನಸಭಾ ಕ್ಷೇತ್ರದಲ್ಲಿ ಗ್ರಾಮೀಣ ಪ್ರದೇಶದಲ್ಲಿ ಜನಸಾಮಾನ್ಯರಿಗೆ ಜೀವನ ನಿರ್ವಹಿಸುವುದು ಬಹಳ ಕಷ್ಟವಾಗಿದೆ. ಕೆರೆ ಕುಂಟೆಗಳು ಒಣಗಿದ್ದು ಜನಸಾಮಾನ್ಯರಿಗೆ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ತೊಂದರೆ ಉಂಟಾಗುವ ಪರಿಸ್ಥಿತಿ ಉದ್ಭವಿಸಿದೆ” ಎಂದು ಮನವಿಯಲ್ಲಿ ತಿಳಿಸಿದ್ದಾರೆ.
“ಕೇಂದ್ರ ಸರ್ಕಾರ ವಿಶೇಷ ಯೋಜನೆಯಡಿ ಕುಡಿಯುವ ನೀರು ಒದಗಿಸಲು ಅನುದಾನ ನೀಡಬೇಕು. ಅಷ್ಟೇ ಅಲ್ಲ ಗ್ರಾಮೀಣ ರಸ್ತೆಗಳು ಹಾಳಾಗಿದ್ದು ಹಳ್ಳಿಯಿಂದ ಹೋಬಳಿ ಸಂಪರ್ಕಿಸುವ ಹಾಗೂ ಹೋಬಳಿಗಳಿಂದ ತಾಲ್ಲೂಕು ಕೇಂದ್ರಕ್ಕೆ ಸಂಪರ್ಕಿಸುವ ರಸ್ತೆಗಳು ಹದಗೆಟ್ಟಿವೆ. ಹೀಗಾಗಿ ಪ್ರಧಾನಮಂತ್ರಿ ಗ್ರಾಮ್ ಸಡಕ್ ಯೋಜನೆಯಡಿ ಈ ರಸ್ತೆಗಳನ್ನು ಅಭಿವೃದ್ಧಿಪಡಿಸಲು ಕನಿಷ್ಠ 200 ಕೋಟಿ ಹಣ ಒದಗಿಸಬೇಕು” ಜಯಚಂದ್ರ ಮನವಿ ಮಾಡಿದ್ದಾರೆ.
ಈ ಸುದ್ದಿ ಓದಿದ್ದೀರಾ? ಅಮೆರಿಕ ಕಂಪನಿಗಳಿಂದ ರಾಜ್ಯದಲ್ಲಿ ₹25,000 ಕೋಟಿ ಹೂಡಿಕೆಗೆ ಆಸಕ್ತಿ
ನರೇಗಾ ಯೋಜನೆಯಲ್ಲಿ ಹೆಚ್ಚಿನ ಕೆಲಸಗಳನ್ನು ಮಾಡಲು ವಿಶೇಷ ಅನುದಾನ ನೀಡುವಂತೆ ಸಹ ಇದೆ ಸಂದರ್ಭದಲ್ಲಿ ಜಯಚಂದ್ರ ಅವರು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಅವರಿಗೆ ಪ್ರಸ್ತಾವನೆ ಸಲ್ಲಿಸಿದ್ದಾರೆ.
ಕೇಂದ್ರ ಸಚಿವರು ತಮ್ಮ ಎಲ್ಲ ಪ್ರಸ್ತಾವನೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದು ಹಂತ ಹಂತವಾಗಿ ಹಣ ಬಿಡುಗಡೆ ಮಾಡುವ ಭರವಸೆ ನೀಡಿದ್ದಾರೆ ಎಂದು ಜಯಚಂದ್ರ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.