2002ರ ಗೋಧ್ರಾ ನಂತರದ ದಂಗೆಗಳ ಪ್ರಕರಣಕ್ಕೆ ಸಂಬಂಧಿಸಿ ಸಾಮಾಜಿಕ ಕಾರ್ಯಕರ್ತೆ, ಮಾನವ ಹಕ್ಕುಗಳ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ ಅವರಿಗೆ ಸುಪ್ರೀಂ ಕೋರ್ಟ್ ಶನಿವಾರ ರಾತ್ರಿ ನಡೆಸಿದ ವಿಶೇಷ ವಿಚಾರಣೆಯಲ್ಲಿ ಮಧ್ಯಂತರ ಜಾಮೀನು ನೀಡಿದೆ.
ಸಾಕ್ಷಾಧಾರಗಳನ್ನು ಸೃಷ್ಟಿಸಿದ ಆರೋಪದ ಮೇಲೆ ತೀಸ್ತಾ ಸೆಟಲ್ವಾಡ್ ವಿರುದ್ಧ ಪ್ರಕರಣ ದಾಖಲಾಗಿತ್ತು. ಹೀಗಾಗಿ ಅವರು ಜಾಮೀನು ಅರ್ಜಿಯನ್ನು ಗುಜರಾತ್ ಹೈಕೋರ್ಟಿಗೆ ಸಲ್ಲಿಸಿದ್ದರು. ಆದರೆ, ಇದನ್ನು ತಿರಸ್ಕರಿಸಿದ್ದ ಗುಜರಾತ್ ಹೈಕೋರ್ಟ್, ‘ಜಾಮೀನು ನೀಡುವುದಕ್ಕೆ ಸಾಧ್ಯವಿಲ್ಲ, ತಕ್ಷಣವೇ ಶರಣಾಗಿ’ ಎಂದು ಕೋರ್ಟ್ ಸೂಚಿಸಿತ್ತು.
ಈ ಹಿನ್ನೆಲೆಯಲ್ಲಿ ಗುಜರಾತ್ ಹೈಕೋರ್ಟ್ ಆದೇಶ ಪ್ರಶ್ನಿಸಿ ತೀಸ್ತಾ ಸೆಟಲ್ವಾಡ್ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು.
ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಎಎಸ್ ಓಕಾ ಮತ್ತು ಪಿಕೆ ಮಿಶ್ರಾ ಅವರನ್ನೊಳಗೊಂಡ ದ್ವಿಸದಸ್ಯ ಪೀಠವು ವಿಚಾರಣೆ ನಡೆಸಿತ್ತು. ಶರಣಾಗುವ ಆದೇಶ ನೀಡುವ ಮೊದಲು ಗುಜರಾತ್ ಹೈಕೋರ್ಟ್ ಸೆಟಲ್ವಾಡ್ ಅವರಿಗೆ ಸ್ವಲ್ಪ ಸಮಯವನ್ನು ನೀಡಬೇಕಿತ್ತು ಎಂದು ಅಭಿಪ್ರಾಯಪಟ್ಟಿತ್ತು. ಆದರೆ, ಅವರಿಗೆ ಮಧ್ಯಂತರ ರಕ್ಷಣೆ ನೀಡುವ ಬಗ್ಗೆ ಒಮ್ಮತಕ್ಕೆ ಬರಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ನ ಮೂವರು ನ್ಯಾಯಾಧೀಶರ ಪೀಠಕ್ಕೆ ವರ್ಗಾಯಿಸಿತ್ತು. ಶನಿವಾರ ರಾತ್ರಿ 9.15ಕ್ಕೆ ವಿಶೇಷ ವಿಚಾರಣೆಯನ್ನು ನಡೆಸಿತು.
ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಬಿಆರ್ ಗವಾಯಿ, ಎಎಸ್ ಬೋಪಣ್ಣ ಮತ್ತು ದೀಪಂಕರ್ ದತ್ತಾ ಅವರನ್ನೊಳಗೊಂಡ ಪೀಠವು ಜಾಮೀನು ಅರ್ಜಿಯನ್ನು ಪುರಸ್ಕರಿಸಿದ್ದು, ಸದ್ಯ ಬಂಧನದಿಂದ ತೀಸ್ತಾ ಸೆಟಲ್ವಾಡ್ ಪಾರಾಗಿದ್ದಾರೆ.
ಹಿರಿಯ ವಕೀಲ ಸಿಯು ಸಿಂಗ್ ಮತ್ತು ವಕೀಲೆ ಅಪರ್ಣಾ ಭಟ್ ತೀಸ್ತಾ ಸೆಟಲ್ವಾಡ್ ಪರ ಹಾಗೂ ಗುಜರಾತ್ ಪೊಲೀಸರ ಪರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಮಂಡಿಸಿದ್ದರು.
ಏನಿದು ಪ್ರಕರಣ?
ಗುಜರಾತ್ ಗಲಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಮತ್ತು ಇತರರ ಬಗ್ಗೆ ನಕಲಿ ಸಾಕ್ಷ್ಯ ಸೃಷ್ಟಿಸಿದ, ಪೊಲೀಸರಿಗೆ ಆಧಾರರಹಿತ ಮಾಹಿತಿ ನೀಡಿದ ಹಾಗೂ ಕ್ರಿಮಿನಲ್ ಪಿತೂರಿ ನಡೆಸಲಾಗಿದೆ ಎಂಬ ಆರೋಪದ ಮೇಲೆ ತೀಸ್ತಾ ಸೆಟಲ್ವಾಡ್ ಮತ್ತು ಸಹ ಆರೋಪಿ ಮಾಜಿ ಐಪಿಎಸ್ ಅಧಿಕಾರಿ ಆರ್ ಬಿ ಶ್ರೀಕುಮಾರ್ ಅವರನ್ನು 2022ರ ಜೂನ್ 25 ರಂದು ಗುಜರಾತ್ ಪೊಲೀಸ್ ಕ್ರೈಂ ಬ್ರಾಂಚ್ ಬಂಧಿಸಿತ್ತು.
ಗಲಭೆ ಸಮಯದಲ್ಲಿ ಶ್ರೀಕುಮಾರ್ ಅವರು ಪೊಲೀಸ್ ಮಹಾನಿರ್ದೇಶಕರಾಗಿದ್ದರು. ಗುಜರಾತ್ ಗಲಭೆ ಪ್ರಕರಣದಲ್ಲಿ ಆಗ ಮುಖ್ಯಮಂತ್ರಿ ಆಗಿದ್ದ ನರೇಂದ್ರ ಮೋದಿ ಸೇರಿದಂತೆ 64 ಜನರಿಗೆ ಎಸ್ಐಟಿ ಕಳೆದ ವರ್ಷ ಕ್ಲೀನ್ಚಿಟ್ ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು.