- ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಮೇ 2ರಂದು ಗುಡುಗು ಸಹಿತ ಭಾರೀ ಮಳೆ, ‘ಯೆಲ್ಲೋ ಅಲರ್ಟ್’ ಘೋಷಣೆ
- ಗುಡುಗು, ಮಿಂಚು ಸಹಿತ ಮಳೆಯಾಗುವುದರಿಂದ ನಾಗರಿಕರು ಎಚ್ಚರಿಕೆಯಿಂದ ಇರುವಂತೆ ತಿಳಿಸಿದ ಇಲಾಖೆ
ಮಹಾರಾಷ್ಟ್ರದ ಪಶ್ಚಿಮ ಭಾಗದಿಂದ ಕರ್ನಾಟಕದತ್ತ ಗಾಳಿ ಬೀಸುತ್ತಿದ್ದು, ರಾಜ್ಯದ ಹಲವೆಡೆ ಮುಂದಿನ ನಾಲ್ಕು ದಿನ ಗುಡುಗು ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಬೀದರ್, ಕಲಬುರಗಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ನಿರೀಕ್ಷೆಯಿದ್ದು, ಮುಂಜಾಗೃತಾ ಕ್ರಮವಾಗಿ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ. ರಾಯಚೂರು, ವಿಜಯಪುರ, ಕಲಬುರಗಿ ಜಿಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಮೈಸೂರು, ಕೊಡಗು ಜಿಲ್ಲೆಗಳಲ್ಲಿ ಏಪ್ರಿಲ್ 30ರಿಂದ ಮೂರು ದಿನಗಳ ಕಾಲ ಭಾರೀ ಮಳೆಯಾಗಲಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಮೇ 2ರಂದು ಗುಡುಗು ಸಹಿತ ಮಳೆಯಾಗಲಿದ್ದು, ಹವಾಮಾನ ಇಲಾಖೆ ‘ಯೆಲ್ಲೋ ಅಲರ್ಟ್’ ಘೋಷಿಸಿದೆ.
ಈ ಸುದ್ದಿ ಓದಿದ್ದೀರಾ? 2050ರ ವೇಳೆಗೆ ನೀರಿನ ಕೊರತೆ ಎದುರಿಸಲಿರುವ ಬೆಂಗಳೂರು
ಹವಾಮಾನ ಇಲಾಖೆ 30-40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಮುನ್ಸೂಚನೆ ನೀಡಿದೆ. ಗುಡುಗು-ಮಿಂಚು ಸಹಿತ ಮಳೆಯಾಗುವುದರಿಂದ ನಾಗರಿಕರು ಎಚ್ಚರಿಕೆಯಿಂದ ಇರುವಂತೆ ತಿಳಿಸಿದೆ.
ಆಂಧ್ರಪ್ರದೇಶ, ಕೇರಳ, ತಮಿಳುನಾಡು, ಪುದುಚೇರಿ ರಾಜ್ಯಗಳಲ್ಲಿ ಮುಂದಿನ ಮೂರು ದಿನ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ನೀಡಿದೆ.
ಬೆಂಗಳೂರಿನಲ್ಲಿ ಶುರುವಾದ ಜೋರು ಮಳೆ
ಕಳೆದ ಹಲವು ದಿನಗಳಿಂದ ಬಿಸಿಲಿನಿಂದ ಹೈರಾಣಾಗಿದ್ದ ಜನರಿಗೆ ಮಳೆ ಬಂದು ತಂಪೆರೆದಿದೆ. ಬೆಂಗಳೂರಿನ ಹಲವೆಡೆ ಶನಿವಾರ ಮಧ್ಯಾಹ್ನದಿಂದ ಮಳೆ ಆರಂಭವಾಗಿದೆ.
ಗೊಟ್ಟಿಗೆರೆ, ಮಲ್ಲೇಶ್ವರಂ, ಕೆಆರ್ ಮಾರ್ಕೆಟ್, ಕಾರ್ಪೊರೇಷನ್ ಸರ್ಕಲ್, ರಿಚ್ಮಂಡ್ ಸರ್ಕಲ್ ಸೇರಿದಂತೆ ನಗರದ ಅನೇಕ ಕಡೆ ಕಳೆದ ಒಂದು ಗಂಟೆಯಿಂದ ಮಳೆಯಾಗುತ್ತಿದೆ.