ತೆಂಗು ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕಾಗಿ ಒತ್ತಾಯಿಸಿ ಜುಲೈ 19 ರಂದು ತೆಂಗು ಬೆಳೆಗಾರರ ವಿಧಾನಸೌಧ ಚಲೋ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಪ್ರಾಂತ ರೈತ ಸಂಘದ ಅಧ್ಯಕ್ಷ ಜಿ ಸಿ ಬಯ್ಯರೆಡ್ಡಿ ತಿಳಿಸಿದರು.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ಸಿದ್ದರಾಮಯ್ಯ ಅವರು ವಿರೋಧ ಪಕ್ಷದಲ್ಲಿ ಇದ್ದಾಗ ಗೋ ಹತ್ಯೆ ನಿಷೇಧ ಮತ್ತು ಎಪಿಎಂಸಿ ಕಾಯ್ದೆ ಹಿಂಪಡೆಯಲು ಹೋರಾಟ ಮಾಡಿದ್ದರು. ಆದರೆ, ಅವರು ಅಧಿಕಾರಕ್ಕೆ ಬಂದ ಮೇಲೆ ಅದನ್ನು ವಾಪಸ್ ಪಡೆಯಲು ಮೀನಮೇಷ ಎಣಿಸುತಿದ್ದರೆ” ಎಂದು ಆರೋಪಿಸಿದರು.
“ಕ್ವಿಂಟಾಲ್ ಕೊಬ್ಬರಿಗೆ ಕನಿಷ್ಠ 16,730 ರೂ. ಬೆಂಬಲ ಬೆಲೆ ನಿಗದಿ ಪಡಿಸಿ, ಖರೀದಿ ಕೇಂದ್ರಗಳನ್ನು ತೆರೆಯಲು ಆಗ್ರಹಿಸುತ್ತೇವೆ. ಕೇಂದ್ರ ಸರ್ಕಾರದ ತಪ್ಪು ಆಮದು ನೀತಿ ಹಾಗೂ ರಾಜ್ಯ ಸರ್ಕಾರದ ನಿರ್ಲಕ್ಷ್ಯ ಧೋರಣೆ ವಿರೋಧಿಸಿ ಪ್ರತಿಭಟನೆ ಮಾಡುತ್ತೇವೆ” ಎಂದರು.
“ರಾಜ್ಯದಲ್ಲಿ ಒಟ್ಟು 6.46 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ತೆಂಗು ಬೆಳೆ ಬೆಳೆಯಲಾಗುತ್ತಿದ್ದು, ವಾರ್ಷಿಕ ಕೊಬ್ಬರಿ ಉತ್ಪಾದನೆ 2.18 ಲಕ್ಷ ಮೆಟ್ರಿಕ್ ಟನ್ ನಷ್ಟಿದೆ. ಇಂತಹ ಪ್ರಮುಖ ಬೆಳೆಯಾದ ಕೊಬ್ಬರಿ ಬೆಲೆಯು ಹಿಂದೆಂದೂ ಕೇಳಿರದ ಪ್ರಮಾಣದಲ್ಲಿ, ಕ್ವಿಂಟಾಲ್ಗೆ 6 ರಿಂದ 7 ಸಾವಿರಕ್ಕೆ ಕುಸಿದಿದೆ. ಕೊಬ್ಬರಿಯ ಬೆಲೆ ಪಾತಾಳಕ್ಕೆ ಇಳಿದಿರುವುದು ತೆಂಗು ಬೆಳೆಯುವ ಪ್ರದೇಶದ ರೈತರಲ್ಲಿ ಆತಂಕ ಉಂಟುಮಾಡಿದೆ” ಎಂದು ಹೇಳಿದರು.
“ಕೂಡಲೇ ಕೇಂದ್ರ ಸರ್ಕಾರ ರೈತ ವಿರೋಧಿ ಆಮದು ನೀತಿಯನ್ನು ಕೈ ಬಿಟ್ಟು, ರಾಜ್ಯ ತೋಟಾಗಾರಿಕೆ ಇಲಾಖೆ ಶಿಪಾರಸ್ಸಿನಂತೆ ಒಂದು ಕ್ವಿಂಟಾಲ್ ದುಂಡು ಕೊಬ್ಬರಿಗೆ 16,730 ರೂಪಾಯಿ ಬೆಂಬಲ ಬೆಲೆಯಾಗಿ ನಿಗದಿ ಮಾಡಬೇಕು. ರಾಜ್ಯ ಸರ್ಕಾರ ರೈತರ ರಕ್ಷಣೆಗಾಗಿ ಕನಿಷ್ಠ 5 ಸಾವಿರ ರೂ.ಗಳ ಪ್ರೋತ್ಸಾಹ ಧನ ನೀಡಬೇಕು. ತೆಂಗು ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕಾಗಿ ಬೆಳೆ ಪ್ರದೇಶದ ರೈತ ಮುಖಂಡರು, ಶಾಸಕರು, ಸಂಸದರ ನಿಯೋಗವನ್ನು ಪ್ರಧಾನಿಗಳ ಬಳಿಗೆ ಕರೆದೊಯ್ಯಬೇಕು” ಎಂದು ಆಗ್ರಹಿಸಿದರು.
ಈ ಸುದ್ದಿ ಓದಿದ್ದೀರಾ? ತುಮಕೂರಿನಲ್ಲಿ ಐಫೋನ್ ತಯಾರಿಕಾ ಘಟಕ: 8,800 ಕೋಟಿ ರೂ. ಹೂಡಿಕೆ, 14,000 ಉದ್ಯೋಗ ಸೃಷ್ಟಿ
“ಹೋರಾಟ ಬೆಂಗಳೂರು ನಗರದ ಫ್ರೀಡಂ ಪಾರ್ಕ್ ನಲ್ಲಿ ನಡೆಯಲಿದ್ದು, ರಾಜ್ಯದ ತೆಂಗು ಬೆಳೆಗಾರರು ಪಕ್ಷಾತೀತವಾಗಿ ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು” ಎಂದು ತೆಂಗು ಬೆಳೆಗಾರರಲ್ಲಿ ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ, ಕರ್ನಾಟಕ ಪ್ರಾಂತ ರೈತ ಸಂಘ ರಾಜ್ಯ ಉಪಾಧ್ಯಕ್ಷರು ಎನ್ ವೆಂಕಟಾಚಲಯ್ಯ, ರಾಜ್ಯ ಪ್ರಧಾನ ಕಾರ್ಯದರ್ಶಿ ಟಿ ಯಶವಂತ ಇದ್ದರು.