ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಬೇಕು ಎಂದು ಆಗ್ರಹಿಸಿ ವಿಜಯನಗರ ಜಿಲ್ಲಾಧಿಕಾರಿಗೆ ಮದ್ಯ ನಿಷೇಧ ಆಂದೋಲನದ ಕಾರ್ಯಕರ್ತರು ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ.
ಸುಮಾರು ಏಳು ವರ್ಷಗಳಿಂದ ಸಕ್ರಿಯವಾಗಿ ಮದ್ಯ ನಿಷೇಧ ಆಂದೋಲನ ವತಿಯಿಂದ ಹೋರಾಟ ನಡೆಸುತ್ತಿದ್ದೇವೆ. ಆದರೂ ಕೂಡ ಯಾವುದೇ ಪ್ರಯೋಜನವಾಗಿಲ್ಲ. ಬದಲಾಗಿ ಅಕ್ರಮ ಮದ್ಯದ ದಂಧೆ ಹೆಮ್ಮರವಾಗಿ ಬೆಳೆಯುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಮದ್ಯ ನಿಷೇಧ ಆಂದೋಲನ ಜಿಲ್ಲಾ ಮುಖಂಡೆ ತ್ರಿವೇಣಿ ಬನ್ನಿಕಲ್ಲು ಈ ದಿನ.ಕಾಮ್ ಜೊತೆ ಮಾತನಾಡಿ “ನಾವು 2015ರಿಂದ ಮದ್ಯ ನಿಷೇಧ ಕುರಿತು ಹೋರಾಟ ಮಾಡುತ್ತಾ ಬಂದಿದ್ದೇವೆ. ಹಲವು ಅಧಿಕಾರಿಗಳಿಗೆ ಮನವಿ ಪತ್ರಗಳನ್ನೂ ಸಲ್ಲಿಸಿದ್ದೇವೆ. ಆದರೆ, ಈವರೆಗೆ ಯಾವುದೇ ರೀತಿಯ ಕ್ರಮ ಕೈಗೊಂಡಿಲ್ಲ” ಎಂದು ಆರೋಪಿಸಿದರು.
“ಕರ್ನಾಟಕದ ಹಳ್ಳಿಗಳಲ್ಲಿ ಅಕ್ರಮ ಮದ್ಯದ ಅಂಗಡಿಗಳು ಮಹಿಳೆಯರಿಗೆ ದೊಡ್ಡ ಸಮಸ್ಯೆಯನ್ನು ಉಂಟುಮಾಡುತ್ತಿವೆ. ಸಣ್ಣ ಪುಟ್ಟ ಊರುಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವುದರಿಂದ 8ನೇ ತರಗತಿಯ ಚಿಕ್ಕ ಮಕ್ಕಳೂ ಸಹ ಮದ್ಯ ಕುಡಿಯಲು ಪ್ರಾರಂಭಿಸಿದ್ದಾರೆ. ಅಕ್ರಮ ಮಾರಾಟವಿರುವ ಗ್ರಾಮಗಳ ಪಟ್ಟಿಯನ್ನು ಜಿಲ್ಲಾಧಿಕಾರಿ ಕಚೇರಿಗೆ ಹಾಗೂ ಜಿಲ್ಲಾ ಅಬಕಾರಿ ಇಲಾಖೆಗೆ ಹಲವು ಬಾರಿ ಸಲ್ಲಿಸಿದ್ದು, ಮನವಿ ಮಾಡಿದ್ದೇವೆ. ಯಾವುದೇ ಪ್ರಯೋಜನವಾಗಿಲ್ಲ. ಜಿಲ್ಲಾಧಿಕಾರಿಯವರು ಈಗಲಾದರೂ ಗ್ರಾಮಗಳಿಗೆ ಭೇಟಿ ನೀಡಿ ತನಿಖೆ ನಡೆಸಿ ಕಠಿಣ ಕ್ರಮ ಜರುಗಿಸಬೇಕು” ಎಂದು ಆಗ್ರಹಿಸಿದರು.
ಈ ಸುದ್ದಿ ಓದಿದ್ದೀರಾ? ಕಲಬುರಗಿ | ತಹಶೀಲ್ದಾರ್ ಕಚೇರಿಯಲ್ಲಿ ಲಂಚ ಆರೋಪ; ಆದರ್ಶ ಗ್ರಾಮ ಸಮಿತಿ ಖಂಡನೆ
“ಅಕ್ರಮ ಮದ್ಯ ಮಾರಾಟ ತಡೆಗೆ ಸರಿಯಾಗಿ ಕ್ರಮ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲಾಗುತ್ತದೆ” ಎಂದು ಎಚ್ಚರಿಕೆ ನೀಡಿದರು.
ಈ ವೇಳೆ ಗ್ರಾಮೀಣ ಕೂಲಿಕಾರರ ಸಂಘ ತಾಲೂಕು ಸಂಚಾಲಕಿ ಶೈನಾಜ, ಹರಪ್ಪನಹಳ್ಳಿ ತಾಲೂಕು ಕಾರ್ಯಕರ್ತೆ ಭಾಗ್ಯ ಸೇರಿದಂತೆ ಇತರರು ಇದ್ದರು.